ನವದೆಹಲಿ (PTI): ಪಂಚಾಯತ್ ರಾಜ್ ಸಂಸ್ಥೆಗಳ (ಪಿಆರ್ಐ) ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಸಮಗ್ರ ಪರಿಶೀಲನೆ ಕೈಗೊಳ್ಳಲು ಸಂಸದೀಯ ಸಮಿತಿಯು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಜತೆಗೆ ಪ್ರಜಾಸತ್ತಾತ್ಮಕ ವಿಕೇಂದ್ರೀಕರಣ , ಆರ್ಥಿಕ ಸುಸ್ಥಿರತೆ ಮತ್ತು ನಾಗರಿಕರ ಪಾಲ್ಗೊಳ್ಳುವಿಕೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಭವಿಷ್ಯದ ಸುಧಾರಣೆಗೆ ಅನುವಾಗುವ ಮಾರ್ಗಸೂಚಿ ರೂಪಿಸುವಂತೆಯೂ ಸಲಹೆ ನೀಡಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಗೆ ಸಂಬಂಧಿಸಿದ ಸ್ಥಾಯಿ ಸಮಿತಿಯು ಬುಧವಾರ ಸಂಸತ್ತಿನಲ್ಲಿ ಮಂಡಿಸಲಾದ ವರದಿಯೊಂದರಲ್ಲಿ ವ್ಯವಸ್ಥೆಯ ಸುಧಾರಣೆಗೆ ಸಂಬಂಧಿಸಿದ ಕೆಲವು ವಿಚಾರಗಳನ್ನು ಪ್ರಸ್ತಾಪಿಸಿದೆ.
'ಪಂಚಾಯತ್ ರಾಜ್ ಸಂಸ್ಥೆಗಳು ಕಳೆದ ಮೂರು ದಶಕದಲ್ಲಿ ಪ್ರಜಾಸತ್ತಾತ್ಮಕ ವಿಕೇಂದ್ರಿಕರಣದ ಕೇಂದ್ರಬಿಂದುವಾಗಿ ಹೊರಹೊಮ್ಮಿವೆ. ಆದರೂ, ಕೆಲವು ಸಾಂಸ್ಥಿಕ ಸಮಸ್ಯೆಗಳು ಮುಂದುವರಿದಿವೆ. ಹೀಗಾಗಿ ಅವುಗಳನ್ನು ಪರಿಹರಿಸಿ ಸುಸ್ಥಿರ ಮತ್ತು ಸಮಗ್ರ ಅಭಿವೃದ್ಧಿಯನ್ನು ಖಾತರಿಪಡಿಸಿಕೊಳ್ಳಲು ಗಮನಹರಿಸಬೇಕಿದೆ' ಎಂದೂ ಹೇಳಿದೆ.
ಹಲವು ಪ್ರದೇಶಗಳಲ್ಲಿ ಗ್ರಾಮಸಭೆಯು ಔಪಚಾರಿಕವಾಗಿ ನಡೆಯುತ್ತಿದ್ದು, ಸಾರ್ವಜನಿಕರ ಪಾಲ್ಗೊಳ್ಳುವಿಕೆ ಕಡಿಮೆಯಾಗಿದೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದ್ದು, ಇದನ್ನು ಸುಧಾರಿಸುವ ನಿಟ್ಟಿನಲ್ಲಿ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜತೆಗೆ ಸಮನ್ವಯ ಸಾಧಿಸಬೇಕು. ಜಾಗೃತಿ ಅಭಿಯಾನಗಳು, ಡಿಜಿಟಲ್ ವೇದಿಕೆಗಳನ್ನು ಬಳಸಿಕೊಂಡು ಗ್ರಾಮಸಭೆಗಳಲ್ಲಿ ಮಹಿಳೆಯರು, ಯುವಜನರು ಹಾಗೂ ಸಮಾಜದ ವಿವಿಧ ವರ್ಗಗಳು ಪಾಲ್ಗೊಳ್ಳುವಂತೆ ಮಾಡಬೇಕು ಎಂದೂ ಸಲಹೆ ನೀಡಿದೆ.
ಜತೆಗೆ ಪಂಚಾಯತ್ ರಾಜ್ ಸಂಸ್ಥೆಗಳು ಸ್ವಯಂ ಆದಾಯ ಪಡೆಯುವುದನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳು, ತರಬೇತಿಗಳನ್ನು ನೀಡಬೇಕು. ಸ್ವ-ಸಹಾಯ ಗುಂಪುಗಳನ್ನು ಬಲಪಡಿಸಿಕೊಳ್ಳಬೇಕು, ಮಹಿಳೆಯರ ಪ್ರಾತಿನಿಧ್ಯಕ್ಕೆ ಒತ್ತು ನೀಡಬೇಕು ಎಂದೂ ಸಲಹೆ ನೀಡಿದೆ.
ಅಲ್ಲದೇ, ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸಲು ಗ್ರಾಮ ಸಭೆಯನ್ನು ಪುನರುಜ್ಜೀವನಗೊಳಿಸುವುದು ಅಗತ್ಯ ಎಂದೂ ಸಮಿತಿ ಹೇಳಿದೆ.

