ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರದ ವಿರುದ್ಧ ಸಿಪಿಐ(ಎಂ) ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರಕ್ಕೆ ಬೆಂಬಲ ನೀಡುತ್ತಿರುವ ಎಡಪಕ್ಷಗಳು ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ ಎಂ. ಸಾಯಿ ಕುಮಾರ್ ನಡುವೆ ಯಾರನ್ನು ಆಯ್ದುಕೊಳ್ಳುತ್ತೀರಿ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳು ಪ್ರತಿಭಟನೆಗಳಲ್ಲಿ ಭಾಗವಹಿಸುವುದನ್ನು ತಡೆಯುವ ಹಾಗೂ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಅಧಿಕಾರಿಗಳು ಹೊರಡಿಸಿದ ಸುತ್ತೋಲೆಗಳು ಈ ರಾಜಕೀಯ ವಿವಾದಕ್ಕೆ ಕಾರಣವಾಗಿವೆ.
ಮುಖ್ಯ ಕಾರ್ಯದರ್ಶಿ ಸಾಯಿ ಕುಮಾರ್ ಅವರ ಸೇವಾ ಅವಧಿಯನ್ನು ವಿಸ್ತರಿಸಿರುವುದನ್ನು ತಕ್ಷಣವೇ ರದ್ದುಗೊಳಿಸಿ, ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಆಗ್ರಹಿಸಿದ್ದಾರೆ.
ಸಾರ್ವಜನಿಕರ ಆಕ್ರೋಶದ ನಂತರ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದ್ದರೂ, ಮುಖ್ಯ ಕಾರ್ಯದರ್ಶಿಯ ಸಮ್ಮತಿಯಿಲ್ಲದೆ ಇಂತಹ ಆದೇಶ ಹೊರಡಿಸಲು ಸಾಧ್ಯವಿಲ್ಲ. ದಿಂಡಿಗಲ್ ಜಿಲ್ಲೆಯಲ್ಲಿ ಸ್ಥಳೀಯ ಕಮ್ಯುನಿಸ್ಟ್ ಕಾರ್ಯಕರ್ತರ ವಿವರ ಸಂಗ್ರಹಿಸಲು ತಹಸೀಲ್ದಾರ್ ಹೊರಡಿಸಿದ ಆದೇಶ ಬೆಂಕಿಗೆ ತುಪ್ಪ ಸುರಿದಂತಾಗಿದೆ ಎಂದು ನಾಯಕರು ಆರೋಪಿಸಿದ್ದಾರೆ.
ʼನೀವು ಅಧಿಕಾರಿಗಳ ಮೂಲಕ ಸರ್ಕಾರ ನಡೆಸಲು ಬಯಸುತ್ತೀರೋ ಅಥವಾ ಎಡಪಕ್ಷಗಳ ಬೆಂಬಲದೊಂದಿಗೆ ಮುಂದುವರಿಯಲು ಬಯಸುತ್ತೀರೋ ಎಂಬುದನ್ನು ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಬೇಕುʼ ಎಂದು ಷಣ್ಮುಗಂ ಆಗ್ರಹಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸಿ.ಟಿ.ಆರ್. ನಿರ್ಮಲ್ ಕುಮಾರ್, ದಿಂಡಿಗಲ್ ತಹಸೀಲ್ದಾರ್ ಜಿಲ್ಲಾಧಿಕಾರಿಗಳ ಗಮನಕ್ಕೆ ತರದೆ ಸ್ವತಂತ್ರವಾಗಿ ನಿರ್ಧಾರ ತಳೆದಿದ್ದಾರೆ. ಈ ಬಗ್ಗೆ ವರದಿ ಕೇಳಲಾಗಿದ್ದು, ಎಡಪಕ್ಷಗಳ ನಾಯಕರೊಂದಿಗೂ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೇವಲ ಮೂರು ತಿಂಗಳ ಹಿಂದಷ್ಟೇ ಅಧಿಕಾರ ವಹಿಸಿಕೊಂಡಿರುವ ಸಿಎಂ ವಿಜಯ್ ನೇತೃತ್ವದ ಸರ್ಕಾರಕ್ಕೆ 4 ಶಾಸಕರನ್ನು ಹೊಂದಿರುವ ಎಡಪಕ್ಷಗಳ ಬೆಂಬಲ ಅತ್ಯಗತ್ಯವಾಗಿದೆ. ಈ ಬೆಳವಣಿಗೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

