ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ನಂತರ ನಡೆದ ವಿದ್ಯಾರ್ಥಿ ಪ್ರತಿಭಟನೆಯ ಕುರಿತ ಚರ್ಚೆಗೆ ನಾನು ಸಿದ್ಧನಿದ್ದೇನೆ. ವಿರೋಧ ಪಕ್ಷಗಳ ಎಲ್ಲ ಪ್ರಶ್ನೆಗಳಿಗೂ ನಾನು ಸದನದಲ್ಲಿ ಉತ್ತರಿಸುತ್ತೇನೆ. ಆದರೆ, ಈ ಕುರಿತ ಚರ್ಚೆಗೆ ವಿರೋಧ ಪಕ್ಷದವರನ್ನು ಸಮಾಲೋಚಿಸಿ ಎಂದು ಗೃಹ ಸಚಿವ ಅಮಿತ್ ಶಾ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಬುಧವಾರ(ಆ.12) ಪತ್ರ ಬರೆದಿದ್ದಾರೆ.
ಅಮಿತ್ ಶಾ ಅವರು ಸ್ಪೀಕರ್ಗೆ ಬರೆದಿರುವ ಪತ್ರದಲ್ಲಿ, 'ಪ್ರಜಾಪ್ರಭುತ್ವದಲ್ಲಿ ಸಂವಾದ ಮತ್ತು ಚರ್ಚೆಗಳಿಂದ ಮಾತ್ರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ನನಗೆ ಪ್ರಜಾಪ್ರಭುತ್ವ ಹಾಗೂ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲೆ ಸಂಪೂರ್ಣ ನಂಬಿಕೆಯಿದೆ' ಎಂದು ಹೇಳಿದ್ದಾರೆ.
'ನೀಟ್ ಕುರಿತ ಚರ್ಚೆಯಲ್ಲಿ ವಿರೋಧ ಪಕ್ಷಗಳು ಭಾಗವಹಿಸುವಂತೆ ಅವರನ್ನು ಸಮಾಲೋಚಿಸಿ. ಎಲ್ಲರ ಒಪ್ಪಿಗೆಯಂತೆ ಚರ್ಚೆಗೆ ಬೇಕಾದಷ್ಟು ಸಮಯವನ್ನು ಕೂಡ ನಿಗದಿಪಡಿಸಿ. ಚರ್ಚೆಯ ಸಮಯದಲ್ಲಿ ನಾನು ಅಲ್ಲಿಯೇ ಇರುತ್ತೇನೆ ಮತ್ತು ವಿರೋಧ ಪಕ್ಷಗಳ ಎಲ್ಲ ಪ್ರಶ್ನೆಗಳಿಗೂ ಕೂಡ ಉತ್ತರಿಸುತ್ತೇನೆ' ಎಂದು ಪತ್ರದಲ್ಲಿ ಬರೆದಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆಯಂತಹ ಪ್ರಮುಖ ವಿಷಯದ ಕುರಿತು ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷದ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಈ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದಕ್ಕೂ ಮುನ್ನ ಸಂಸತ್ತಿನ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಅಮಿತ್ ಶಾ, ವಿದ್ಯಾರ್ಥಿ ಪ್ರತಿಭಟನೆಯ ಕುರಿತ ಚರ್ಚೆಗೆ ನಾವು ಸಿದ್ದರಿದ್ದೇವೆ. ಸದನ ನಡೆಯಲು ಬಿಡಿ ಎಂದು ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದರು.

