ನವದೆಹಲಿ: ಯುಜಿಸಿ-ನೆಟ್ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ರದ್ದುಗೊಳಿಸುವಂತೆ ಆಗ್ರಹಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್ಎಸ್ಯುಐ) ಕಾರ್ಯಕರ್ತರು ಸೋಮವಾರ ಇಲ್ಲಿನ ಎನ್ಟಿಎ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ನೂರಾರು ಎನ್ಎಸ್ಯುಐ ಕಾರ್ಯಕರ್ತರು ಹಾಗೂ ಯುಜಿಸಿ-ನೆಟ್ ಅಭ್ಯರ್ಥಿಗಳು ಈ ಧರಣಿಯಲ್ಲಿ ಪಾಲ್ಗೊಂಡಿದ್ದರು. ಮುಂಜಾಗ್ರತಾ ಕ್ರಮವಾಗಿ ಕಚೇರಿ ಆವರಣದಲ್ಲಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಎನ್ಎಸ್ಯುಐ ರಾಷ್ಟ್ರೀಯ ಅಧ್ಯಕ್ಷ ವಿನೋದ್ ಜಾಖಡ್, ಎನ್ಟಿಎ ಅಧ್ಯಕ್ಷರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಪರೀಕ್ಷಾ ವ್ಯವಸ್ಥೆಯಲ್ಲಿ ಪದೇಪದೇ ಸಂಭವಿಸುತ್ತಿರುವ ವೈಫಲ್ಯಗಳು ಸಂಸ್ಥೆಯ ವಿಶ್ವಾಸಾರ್ಹತೆಯನ್ನು ಹಾಳುಗೆಡವಿದೆ ಎಂದು ಅವರು ಆರೋಪಿಸಿದರು.
ಎನ್ಟಿಎ ವೈಫಲ್ಯಕ್ಕೆ ವಿದ್ಯಾರ್ಥಿಗಳು ಬೆಲೆ ತೆರಲು ಸಾಧ್ಯವಿಲ್ಲ. ಸಂಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಮತ್ತು ಅಧ್ಯಕ್ಷರು ರಾಜೀನಾಮೆ ನೀಡಬೇಕು. ಎನ್ಟಿಎ ಬ್ಯಾನ್ ಆಗುವವರೆಗೆ ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಜಾಖಡ್ ಹೇಳಿದರು.
ಇಂಗ್ಲಿಷ್, ಕಾಮರ್ಸ್ ಮತ್ತು ಸಮಾಜ ವಿಜ್ಞಾನ ಪತ್ರಿಕೆಗಳಲ್ಲಿ ಭಾಷಾಂತರ ದೋಷಗಳು, ವ್ಯಾಕರಣ ತಪ್ಪುಗಳು, ಮುದ್ರಣ ದೋಷಗಳು ಹಾಗೂ ಹಳೆಯ ಪ್ರಶ್ನೆಗಳು ಮರುಕಳಿಸಿರುವ ಬಗ್ಗೆ ದೂರುಗಳು ಕೇಳಿಬಂದಿದ್ದವು. ಈ ಕುರಿತು ತನಿಖೆ ನಡೆಸಿದ್ದ ಎನ್ಟಿಎ, ಈ ವಿಷಯಗಳಿಗೆ ಮರುಪರೀಕ್ಷೆ ಘೋಷಿಸಿದ ಬೆನ್ನಲ್ಲೇ ಈ ಪ್ರತಿಭಟನೆ ನಡೆದಿದೆ.
ಪರೀಕ್ಷಾ ಅಕ್ರಮದ ಬಗ್ಗೆ ತನಿಖೆ, ಪಾರದರ್ಶಕ ಹಾಗೂ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತರುವವರೆಗೆ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎನ್ಎಸ್ಯುಐ ಸ್ಪಷ್ಟಪಡಿಸಿದೆ.

