ಉಪ್ಪಳ: ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠ ಹಾಗೂ ಕನಕದಾಸ ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ ಆಶ್ರಯದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ 'ಕನಕಾಭಿಯಾನ' ಕಾರ್ಯಕ್ರಮವು ಪೈವಳಿಕೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಕನಕ ಚಿಂತನೆ ಪ್ರಸಾರ ಮಾಲಿಕೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಕನಕದಾಸರ ಜೀವನ, ಸಾಹಿತ್ಯ ಹಾಗೂ ಚಿಂತನೆಗಳ ಕುರಿತು ಉಪನ್ಯಾಸ ಮತ್ತು ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿ ಕನಕದಾಸರ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸುವುದು ಹಾಗೂ ಅವರ ಮಾನವೀಯ ಚಿಂತನೆಗಳನ್ನು ಪರಿಚಯಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.
ಕಾರ್ಯಕ್ರಮದ ಆರಂಭದಲ್ಲಿ ಎಸ್.ವಿ.ವಿ.ಎಸ್. ಮೀಯಪದವು ಸಂಸ್ಥೆಯ ನಿವೃತ್ತ ಮುಖ್ಯೋಪಾಧ್ಯಾಯ ರಾಜಾರಾಮ ರಾವ್ ಅವರು ದೀಪ ಪ್ರಜ್ವಲಿಸಿದರು. ಸರ್ಕಾರಿ ಪ್ರೌಢಶಾಲೆ ಪೈವಳಿಕೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಆದಂ ಬಳ್ಳೂರು ಅಧ್ಯಕ್ಷತೆ ವಹಿಸಿದ್ದರು.
ಲೇಖಕಿ ಹಾಗೂ ಕಾರ್ಯಕ್ರಮ ಸಂಯೋಜಕಿ ರಾಜಶ್ರೀ ಟಿ. ರೈ ಪೆರ್ಲ ಆಶಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ಉನ್ನತ ಪ್ರೌಢಶಾಲೆ ಪೈವಳಿಕೆಯ ಪ್ರಾಂಶುಪಾಲ ಡೊಮಿನಿಕ್ ಆಗಸ್ಟಿನ್ ಹಾಗೂ ಹಿರಿಯ ಉಪನ್ಯಾಸಕಿ ಬೇಬಿ ಟೀಚರ್ ಗೌರವ ಉಪಸ್ಥಿತರಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧನಾರ್ಥಿ ಸಾಯಿಸುಮಾ ನಾವಡ, ಕಾರಿಂಜ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕನಕದಾಸರ ಜೀವನ ಮತ್ತು ಸಾಹಿತ್ಯದ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಬಳಿಕ ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಭಾಗ್ಯಲಕ್ಷ್ಮೀ ಸ್ವಾಗತಿಸಿ, ಹಿರಿಯ ಶಿಕ್ಷಕ ಉದಯ ಕೆ. ವಂದಿಸಿದರು.

.jpg)
.jpg)
