ನವದೆಹಲಿ: ಕಾಮಗಾರಿಗಳ ಗುತ್ತಿಗೆ ನೀಡುವ ವಿಚಾರಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ಅರುಣಾಚಲ ಪ್ರದೇಶ ಸರ್ಕಾರವು ಸಹಕಾರ ನೀಡುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ಗೆ ಸಿಬಿಐ ಸೋಮವಾರ ಹೇಳಿದೆ.
ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ವಿಕ್ರಮನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಅರುಣಾಚಲ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.
'ಸಿಬಿಐ ಸಲ್ಲಿಸಿದ ವರದಿ ಪರಿಶೀಲಿಸಿದರೆ, ರಾಜ್ಯ ಸರ್ಕಾರದ ಅಸಹಕಾರ ಕಂಡುಬರುತ್ತದೆ. ಆಗಸ್ಟ್ 24ರಂದು ಇಬ್ಬರೂ ಅಧಿಕಾರಿಗಳು ನ್ಯಾಯಾಲಯದಲ್ಲಿ ಖುದ್ದು ಹಾಜರಿರಬೇಕು. ತನಿಖೆಗೆ ಸಹಕರಿಸದಿರುವ ಮತ್ತು ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡದೇ ಇರುವುದಕ್ಕೆ ವಿವರಣೆ ನೀಡಬೇಕು' ಎಂದು ನೋಟಿಸ್ನಲ್ಲಿ ತಿಳಿಸಿದೆ.
ಮುಖ್ಯಮಂತ್ರಿ ಪೆಮಾ ಖಂಡು ಅವರ ಸಂಬಂಧಿಕರ ಒಡೆತನದಲ್ಲಿರುವ ಅಥವಾ ಅವರೊಂದಿಗೆ ಸಂಬಂಧ ಹೊಂದಿರುವ ಸಂಸ್ಥೆಗಳಿಗೆ ಸರ್ಕಾರದ ಕಾಮಗಾರಿಗಳ ಗುತ್ತಿಗೆ ನೀಡಲಾಗಿದೆ ಎನ್ನಲಾದ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ. ಪ್ರಾಥಮಿಕ ತನಿಖೆ ವೇಳೆ ರಾಜ್ಯ ಸರ್ಕಾರವು ಪೂರಕ ದಾಖಲೆಗಳನ್ನು ಒದಗಿಸುತ್ತಿಲ್ಲ ಎಂದು ಅದು ಸುಪ್ರೀಂ ಕೋರ್ಟ್ಗೆ ವರದಿ ಸಲ್ಲಿಸಿದೆ.
'ಬೂಟಾಟಿಕೆಯ ಬದ್ಧತೆ': ಸುಪ್ರೀಂ ಕೋರ್ಟ್ ಆದೇಶದ ಬಳಿಕ ಪ್ರತಿಕ್ರಿಯಿಸಿರುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 'ಸಾರ್ವಜನಿಕ ಜೀವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೊಣೆಗಾರಿಕೆ ಮತ್ತು ಪ್ರಾಮಾಣಿಕತೆ ಬಗೆಗಿನ ಬೂಟಾಟಿಕೆಯ ಬದ್ಧತೆಯ ಪರಿಣಾಮವೆಂಬಂತೆ ಪೆಮಾ ಖಂಡು ಇನ್ನೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಇದು ನಿರೀಕ್ಷಿತ' ಎಂದು ಟೀಕೆ ಮಾಡಿದ್ದಾರೆ.

