ನವದೆಹಲಿ: ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ವೇಳೆ ವಂದೇ ಮಾತರಂ ಗೀತೆಯನ್ನು ಮಧ್ಯದಲ್ಲೇ ನಿಲ್ಲಿಸಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಪಕ್ಷ ಮತ್ತು ಸೋನಿಯಾ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
'ಈ ಪಾಪವನ್ನು ದೇಶದ ಜನರು ಎಂದಿಗೂ ಕ್ಷಮಿಸುವುದಿಲ್ಲ' ಎಂದು ಅಮಿತ್ ಶಾ ಹೇಳಿದರು.
ಚಿತ್ತೋರ್ಗಢದಲ್ಲಿ ರವಿವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಸ್ವಾತಂತ್ರ್ಯ ದಿನದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ವಂದೇ ಮಾತರಂ ಹಾಡುತ್ತಿದ್ದ ಸಂದರ್ಭದಲ್ಲಿ ಅದನ್ನು ನಿಲ್ಲಿಸುವಂತೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷರಿಗೆ ಸೂಚಿಸಿದ್ದರು ಎಂದು ಆರೋಪಿಸಿದರು.
'ಕಾಂಗ್ರೆಸ್ನ ನಾಚಿಕೆಯಿಲ್ಲದ ಸ್ಥಿತಿಯನ್ನು ನೋಡಿ. ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ವಂದೇ ಮಾತರಂ ಹಾಡಲಾಗುತ್ತಿತ್ತು. ಗೀತೆಯ ವೇಳೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷರಿಗೆ ಹಾಡುವುದನ್ನು ನಿಲ್ಲಿಸುವಂತೆ ಹೇಳಿದರು. ನಾವೆಲ್ಲರೂ ಇದನ್ನು ಟಿವಿಯಲ್ಲಿ ನೋಡುತ್ತಿದ್ದೆವು' ಎಂದು ಅಮಿತ್ ಶಾ ಹೇಳಿದರು.
'ಸೋನಿಯಾ ಜಿ, 140 ಕೋಟಿ ಜನರು ನಿಮ್ಮನ್ನು ನೋಡುತ್ತಿದ್ದಾರೆ. ನೀವು ಮಾಡಿದ ಈ ಪಾಪವನ್ನು ದೇಶದ ಜನರು ಎಂದಿಗೂ ಕ್ಷಮಿಸುವುದಿಲ್ಲ. ವಂದೇ ಮಾತರಂ ಅನ್ನು ಅಪೂರ್ಣವಾಗಿ ಬಿಡುವ ಕನಸನ್ನು ಯಾರಾದರೂ ಹೇಗೆ ಕಾಣಲು ಸಾಧ್ಯ? ಕಾಂಗ್ರೆಸ್ನವರು ನಾಚಿಕೆಪಡಬೇಕು' ಎಂದು ಅವರು ಹೇಳಿದರು.
ಕ್ಷಮೆಯಾಚನೆಗೆ ಆಗ್ರಹ
ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಹಾಗೂ ವಂದೇ ಮಾತರಂ ಗೀತೆಯನ್ನು ಬರೆದ ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಅವರಿಗೆ ಕ್ಷಮೆಯಾಚಿಸಬೇಕು ಎಂದು ಶಾ ಒತ್ತಾಯಿಸಿದರು.
'ಇನ್ನೇನಾದರೂ ಗೌರವ ಉಳಿದಿದ್ದರೆ, ಕೈಮುಗಿದು ಬಂಕಿಮ್ ಬಾಬು ಅವರ ಅಮರ ಚೇತನಕ್ಕೆ ಮತ್ತು ದೇಶದ ಜನರಿಗೆ ಕ್ಷಮೆಯಾಚಿಸಬೇಕು' ಎಂದು ಅವರು ಹೇಳಿದರು.
ದೃಶ್ಯಗಳಿಂದ ವಿವಾದ
ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ದೃಶ್ಯಗಳು ಬಹಿರಂಗವಾದ ಬಳಿಕ ವಿವಾದ ಭುಗಿಲೆದ್ದಿದೆ. ವಂದೇ ಮಾತರಂ ಹಾಡಲಾಗುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರು ಪರಸ್ಪರ ಮಾತನಾಡುತ್ತಿರುವುದು ದೃಶ್ಯಗಳಲ್ಲಿ ಕಂಡುಬಂದಿತ್ತು.
ಈ ದೃಶ್ಯಗಳನ್ನು ಆಧರಿಸಿ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ವಂದೇ ಮಾತರಂ ಹಾಡುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ವರ್ತನೆಯು ರಾಷ್ಟ್ರಗೀತೆಗೆ ಅಗೌರವ ತೋರಿದಂತಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

