ನವದೆಹಲಿ: ಚುನಾವಣಾ ತಂತ್ರ ಮತ್ತು ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಕುರಿತು ಚರ್ಚಿಸಲು ನೂತನ ಪದಾಧಿಕಾರಿಗಳ ಜೊತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಶನಿವಾರ(ಆ.22) ಸಭೆಯನ್ನು ಆಯೋಜಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇತ್ತೀಚೆಗೆ ನೂತನ ರಾಷ್ಟ್ರೀಯ ಪದಾಧಿಕಾರಿಗಳ ನೇಮಕವಾದ ಬಳಿಕ ಅವರೊಂದಿಗೆ ನಿತಿನ್ ನವೀನ್ ಅವರು ಇದೇ ಮೊದಲ ಬಾರಿ ಸಭೆ ನಡೆಸುತ್ತಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ತಂತ್ರ ಹಾಗೂ ಸಿದ್ಧತೆ, ತಳಮಟ್ಟದಲ್ಲಿ ಜನರನ್ನು ಸಂಘಟಿಸುವುದು ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವುದು ಸೇರಿದಂತೆ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಈ ಸಭೆಯನ್ನು ಕರೆಯಲಾಗಿದೆ.
ಈ ಸಭೆಯ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರು, ರಾಜ್ಯ ಉಸ್ತುವಾರಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೂಡ ಸಭೆಗಳನ್ನು ನಡೆಸಲು ನಿತಿನ್ ನವೀನ್ ಅವರು ತೀರ್ಮಾನಿಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.
65 ನೂತನ ರಾಷ್ಟ್ರೀಯ ಪದಾಧಿಕಾರಿಗಳಲ್ಲಿ 12 ಮಹಿಳೆಯರು ಕೂಡ ಇದ್ದಾರೆ. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರರಾಜೆ ಸಿಂಧಿಯಾ, ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ, ಬಿ.ಎಲ್. ಸಂತೋಷ್, ರಾಮ್ ಮಾಧವ್ ಸೇರಿದಂತೆ ಹಲವು ಪ್ರಮುಖ ನಾಯಕರು ಬಿಜೆಪಿ ಹೊಸ ರಾಷ್ಟ್ರೀಯ ತಂಡದಲ್ಲಿದ್ದಾರೆ.

