ನವದೆಹಲಿ: ಉತ್ತರಾಖಂಡದ ಹಲ್ದ್ವಾಣಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ಸ್ಥಳದಲ್ಲಿ 'ಶುದ್ಧೀಕರಣ' ಸಮಾರಂಭ ನಡೆಸಿದವರ ವಿರುದ್ಧ ಎಫ್ಐಆರ್ ದಾಖಲಾತಿಯನ್ನು ಖಚಿತಪಡಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರವಿವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದ್ದಾರೆ.
ಈ ಕೃತ್ಯ ಎಸಗಿರುವವರು ಎಸ್ಸಿ/ಎಸ್ಟಿ ಕಾಯ್ದೆಯಡಿಯೂ ಕಠಿಣ ಕಾನೂನು ಕ್ರಮ ಎದುರಿಸಬೇಕು ಎಂದು ಒತ್ತಾಯಿಸಿರುವ ಪ್ರಿಯಾಂಕಾ, ಘಟನೆ ನಡೆದು ಇಪ್ಪತ್ತು ದಿನಗಳೇ ಕಳೆದಿದ್ದರೂ ಕೇಂದ್ರ ಸರಕಾರವು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ್ದಾರೆ.
ಪ್ರಧಾನಿ ಮೋದಿ ಅವರಿಗೆ ಸಂವಿಧಾನದ ಮೇಲೆ ನಿಜವಾಗಿಯೂ ಗೌರವವಿದ್ದರೆ ಉತ್ತರಾಖಂಡದಲ್ಲಿ ಈ ಅಪರಾಧ ಎಸಗಿದವರ ವಿರುದ್ಧ ಎಫ್ಐಆರ್ ದಾಖಲಾಗುವಂತೆ ಮತ್ತು ಎಸ್ಸಿ/ಎಸ್ಟಿ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಪ್ರಿಯಾಂಕಾ ಗಾಂಧಿ ಸಾಮಾಜಿಕ ಜಾಲತಾಣ ಪೋಸ್ಟ್ನಲ್ಲಿ ಹೇಳಿದ್ದಾರೆ.
ಆ.8ರಂದು ಹಲ್ದ್ವಾನಿಯ ರಾಮ್ಲೀಲಾ ಮೈದಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಸಮಾವೇಶದ ನಂತರ ಬಿಜೆಪಿ-ಆರ್ಎಸ್ಎಸ್ನೊಂದಿಗೆ ಗುರುತಿಸಿಕೊಂಡಿರುವ ವ್ಯಕ್ತಿಗಳು ವೇದಿಕೆಯನ್ನು 'ಶುದ್ಧೀಕರಿಸಿದ್ದಾರೆ' ಎಂದು ಆರೋಪಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ, ಈ ಕೃತ್ಯವು ಸಂವಿಧಾನ ಹಾಗೂ ಎಸ್ಸಿ/ಎಸ್ಟಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.
ಇದೇ ವಿಷಯವಾಗಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವೀಡಿಯೊವನ್ನೂ ಪ್ರಿಯಾಂಕಾ ಹಂಚಿಕೊಂಡಿದ್ದಾರೆ. ಈ ಘಟನೆಯನ್ನು ಅಸ್ಪಶ್ಯತೆಯ ಅಭಿವ್ಯಕ್ತಿ ಎಂದು ಬಣ್ಣಿಸಿದ್ದ ರಾಹುಲ್, ಬಿಜೆಪಿ-ಆರ್ಎಸ್ಎಸ್ ಇಂತಹ ಕಲ್ಮಶ ಮನಃಸ್ಥಿತಿಯನ್ನು ಪೋಷಿಸುತ್ತಿವೆ ಎಂದು ಆರೋಪಿಸಿದ್ದರು.

