ಪಟ್ನಾ: ದೆಹಲಿ ಮತ್ತು ಜಾರ್ಖಂಡ್ ನಂತರ ಈಗ ಬಿಹಾರದಲ್ಲೂ ವಿವಿಧ ನೇಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಅಭ್ಯರ್ಥಿಗಳು ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.
ಬಿಹಾರ ಲೋಕ ಸೇವಾ ಆಯೋಗದ (ಬಿಪಿಎಸ್ಸಿ) ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಪರೀಕ್ಷೆ ರದ್ದುಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸಿದ ಬೃಹತ್ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ.
ಪಟ್ನಾದ ಗಾಂಧಿ ಮೈದಾನದಿಂದ ಲೋಕ ಭವನದತ್ತ ಮೆರವಣಿಗೆ ಹೊರಟ ಅಭ್ಯರ್ಥಿಗಳು, ಮಾರ್ಗಮಧ್ಯೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ಗಳನ್ನು ಮುರಿದು ನುಗ್ಗಲು ಯತ್ನಿಸಿದಾಗ ಪೊಲೀಸರು ಮತ್ತು ಪ್ರತಿಭಟನೆಕಾರರ ನಡುವೆ ಘರ್ಷಣೆ ಸಂಭವಿಸಿದೆ.
ಶಿಕ್ಷಕರ ನೇಮಕ ಪರೀಕ್ಷೆಯನ್ನು ಎರಡು ಹಂತಗಳಲ್ಲಿ ನಡೆಸುವ ಸರ್ಕಾರದ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಅಭ್ಯರ್ಥಿಗಳು ಈ ಅಧಿಸೂಚನೆಯನ್ನು ತಕ್ಷಣವೇ ಹಿಂದಕ್ಕೆ ಪಡೆಯುವಂತೆ ಪಟ್ಟು ಹಿಡಿದಿದ್ದಾರೆ.
ಶಿಕ್ಷಕರ ನೇಮಕ ಪರೀಕ್ಷೆಯ ನಿಯಮಗಳಲ್ಲಿ ಬದಲಾವಣೆ ಮಾಡಬೇಕು ಹಾಗೂ ಸಬ್-ಇನ್ಸ್ಪೆಕ್ಟರ್ ನೇಮಕದಲ್ಲಿ ಉಂಟಾಗಿರುವ ಗೊಂದಲಗಳು ಹಾಗೂ ಬಿಪಿಎಸ್ಸಿಯಲ್ಲಿನ ಅಕ್ರಮಗಳನ್ನು ತಕ್ಷಣವೇ ಬಗೆಹರಿಸಬೇಕು ಎಂದು ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಒತ್ತಾಯಿಸಿದ್ದಾರೆ.


