ನವದೆಹಲಿ: ಮಹಿಳಾ ಸಹೋದ್ಯೋಗಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ತರುಣ್ ತೇಜ್ಪಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
'ತೆಹೆಲ್ಕಾ' ನಿಯತಕಾಲಿಕೆ ಮಾಜಿ ಸಂಪಾದಕ ತೇಜ್ಪಾಲ್ ಅವರು ಸಹೋದ್ಯೋಗಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಬಾಂಬೆ ಹೈಕೋರ್ಟ್ ಈ ತಿಂಗಳ ಆರಂಭದಲ್ಲಿ ತೀರ್ಪು ನೀಡಿತ್ತು.
ಆದರೆ ಈ ತೀರ್ಪನ್ನು ಪ್ರಶ್ನಿಸಿರುವ ತೇಜ್ಪಾಲ್, ರಕ್ಷಣೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ಏಕ ಸದಸ್ಯ ಪೀಠವು ಅರ್ಜಿ ವಿಚಾರಣೆಗೆ ನಿರಾಕರಿಸಿದೆ. ಅರ್ಜಿದಾರರು ಶರಣಾಗುವವರೆಗೆ ಈ ಪ್ರಕರಣದಲ್ಲಿ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ತೇಜ್ಪಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಶರಣಾಗುವಿಕೆಯಿಂದ ವಿನಾಯಿತಿ ಕೋರಿ ಸಲ್ಲಿಸಿರುವ ಅರ್ಜಿಯನ್ನು ಮಿಚಾರಣೆಗೆ ಪಟ್ಟಿ ಮಾಡಬೇಕು ಎಂದು ಕೋರಿದರು. ಆದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸುಪ್ರೀಂ ಕೋರ್ಟ್ ನಿಯಮಗಳ ಪ್ರಕಾರ ಅರ್ಜಿದಾರರು ಶರಣಾಗುವವರೆಗೆ ಮೇಲ್ಮನವಿಯನ್ನು ನ್ಯಾಯಾಲಯದ ಎದುರು ವಿಚಾರಣೆಗೆ ಪಟ್ಟಿ ಮಾಡಲು ಆಗದು ಎಂದು ವಾದಿಸಿದರು.
13 ವರ್ಷ ಹಿಂದಿನ ಪ್ರಕರಣ
ಅಂದಹಾಗೆ, ಈ ಪ್ರಕರಣ 13 ವರ್ಷಗಳಷ್ಟು ಹಿಂದಿನದು. ಸಂಸ್ಥೆಯ ವತಿಯಿಂದ 2013ರಲ್ಲಿ ಗೋವಾದ ಹೋಟೆಲ್ವೊಂದರಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ತೇಜ್ಪಾಲ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಹೋದ್ಯೋಗಿ ದೂರು ನೀಡಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯ ತೇಜ್ಪಾಲ್ ಅವರನ್ನು 2021ರಲ್ಲಿ ಖುಲಾಸೆ ಮಾಡಿತ್ತು. ಅದನ್ನು ಪ್ರಶ್ನಿಸಿ ಗೋವಾ ಸರ್ಕಾರವು ಬಾಂಬೆ ಹೈಕೋರ್ಟ್ನ ಗೋವಾ ಪೀಠದ ಮೊರೆಹೋಗಿತ್ತು.

