ಪೆರ್ಲ: "ಪುಸ್ತಕಗಳು ವಿದ್ಯಾರ್ಥಿಗಳ ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಉತ್ತಮ ಯೋಜನೆ, ಯೋಚನೆ ಮತ್ತು ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತವೆ" ಎಂದು ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ರಾಮ ಕೆ. ಅಭಿಪ್ರಾಯಪಟ್ಟರು.
ನಾಲಂದ ಕಾಲೇಜು ಪೆರ್ಲದಲ್ಲಿ ಗ್ರಂಥಾಲಯ ಸಮಿತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ ಸಂಖ್ಯೆ 49ರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಮತ್ತು ರಾಮಾಯಣ ಮಾಸಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಂಗವಾಗಿ ಪುಸ್ತಕ ಪ್ರದರ್ಶನ ಮತ್ತು ವಿಶೇಷ ಉಪನ್ಯಾಸವನ್ನು ಹಮ್ಮಿಕೊಳ್ಳಲಾಯಿತು. ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಪ್ರೊ. ಎಸ್. ಆರ್. ರಂಗನಾಥನ್ ಅವರ ಕೊಡುಗೆಗಳನ್ನು ಸ್ಮರಿಸಿ ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ, ಗ್ರಂಥಾಲಯದ ಮಹತ್ವ ಹಾಗೂ ಜ್ಞಾನಾರ್ಜನೆಯಲ್ಲಿ ಪುಸ್ತಕಗಳ ಪಾತ್ರದ ಕುರಿತು ಕಾರ್ಯಕ್ರಮದಲ್ಲಿ ಅರಿವು ಮೂಡಿಸಲಾಯಿತು.
ನಾಲಂದ ಕಾಲೇಜಿನ ಮಲಯಾಳಂ ವಿಭಾಗದ ಸಹಾಯಕ ಪ್ರಾಧ್ಯಾಪಕಿ ವಿನೀಶಾ ಎಸ್.ವಿ. ಭಾಗವಹಿಸಿ ರಾಮಾಯಣದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಮೋಹನ್ ಕುಂಟಾರ್, ಉಪಪ್ರಾಂಶುಪಾಲ ಶಂಕರ ಖಂಡಿಗೆ, ಗ್ರಂಥಪಾಲಕ ರೇಣುಕಾ ಪಿ.ವಿ., ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಎನ್.ಎಸ್.ಎಸ್.
ಸ್ವಯಂಸೇವಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪುಸ್ತಕ ಪ್ರದರ್ಶನದ ಮೂಲಕ ವಿವಿಧ ವಿಷಯಗಳ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಓದುವ ಆಸಕ್ತಿ ಹಾಗೂ ಗ್ರಂಥಾಲಯದ ಸದ್ಬಳಕೆಯ ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿತು. ಕಾರ್ಯಕ್ರಮದಲ್ಲಿ 2025-26 ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಪದವಿ ಪರೀಕ್ಷೆಯ ಟಾಪರ್ ಗಳನ್ನು ಗೌರವಿಸಲಾಯಿತು. ಕಾಲೇಜಿನ ಗ್ರಂಥಪಾಲಕ ರೇಣುಕಾ ಸ್ವಾಗತಿಸಿ, ಉಪನ್ಯಾಸಕಿ ಶಿಲ್ಪ ಪಿ ವಂದಿಸಿದರು. ವ್ಯವಹಾರ ಅಧ್ಯಯನ ವಿಭಾಗದ ಮುಖ್ಯಸ್ಥೆ ಅನುಪಮ ಕಾರ್ಯಕ್ರಮ ನಿರೂಪಿಸಿದರು.

.jpg)
.jpg)
.jpg)
