ಗುವಾಹಟಿ: ನೇಮಕಾತಿ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಜಾರ್ಖಂಡ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ಬೆಂಬಲ ಸೂಚಿಸಿದ್ದಾರೆ.
ಜೆಎಂಎಂ ನೇತೃತ್ವದ ಸರ್ಕಾರವು ವಿದ್ಯಾರ್ಥಿಗಳ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
'ವಿದ್ಯಾರ್ಥಿಗಳ ದೂರುಗಳ ಕುರಿತು ಸರ್ಕಾರವು ಸಕಾಲಕ್ಕೆ 'ಸೂಕ್ಷ್ಮತೆ ಮತ್ತು ಪಾರದರ್ಶಕತೆ'ಯಿಂದ ವರ್ತಿಸಿದ್ದರೆ ಈ ಪರಿಸ್ಥಿತಿಯನ್ನು ತಪ್ಪಿಸಬಹುದಿತ್ತು' ಎಂದು ಅವರು ಆರೋಪಿಸಿದ್ದಾರೆ.
'ತಮ್ಮ ಭವಿಷ್ಯ ಮತ್ತು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಭಾವನೆ ನನಗೆ ಅರ್ಥವಾಗುತ್ತದೆ. ಇಂದು ಲಕ್ಷಾಂತರ ಯುವಜನರ ಭವಿಷ್ಯ ಬಿಕ್ಕಟ್ಟಿನಲ್ಲಿದೆ. ಜಾರ್ಖಂಡ್ ವಿದ್ಯಾರ್ಥಿಗಳ ಈ ಹೋರಾಟಕ್ಕೆ ನನ್ನ ನೈತಿಕ ಬೆಂಬಲವಿದೆ' ಎಂದು ಹೇಳಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧ ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಮೈದಾನದಲ್ಲಿ ವಿದ್ಯಾರ್ಥಿಗಳು ಜುಲೈ 29ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.
ತನಿಖೆಗೆ ಸ್ವತಂತ್ರ ಸಮಿತಿ ರಚನೆಗೆ ಆಗ್ರಹ ನೇಮಕಾತಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಕುರಿತ ತನಿಖೆಗಾಗಿ ಹೊರ ರಾಜ್ಯದ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳನ್ನು ಒಳಗೊಂಡ ಸ್ವತಂತ್ರ ಸಮಿತಿಯನ್ನು ರಚನೆ ಮಾಡಬೇಕು ಎಂದು ಪ್ರತಿಭಟನೆ ನಡೆಸುತ್ತಿರುವ ಉದ್ಯೋಗಾಕಾಂಕ್ಷಿಗಳು ಆಗ್ರಹಿಸಿದ್ದಾರೆ. ಜೆಎಂಎಂ ನೇತೃತ್ವದ ಸರ್ಕಾರವು ತನಿಖೆಯನ್ನು ಸಿಐಡಿಗೆ ವಹಿಸುವ ಮೂಲಕ ತಪ್ಪನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ. ನೇಮಕಾತಿ ಹಗರಣದಲ್ಲಿ ದೊಡ್ಡ ಪ್ರಮಾಣದ ಹಣಕಾಸು ಅವ್ಯವಹಾರ ನಡೆದಿದೆ. ಹೀಗಾಗಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇ.ಡಿ) ಈ ಪ್ರಕರಣಗಳ ಕುರಿತು ತನಿಖೆ ನಡೆಸಬೇಕು ಎಂದು ಮೊದಲು ಒತ್ತಾಯಿಸಿದ್ದರು. 'ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಸರ್ಕಾರವು ನಮ್ಮ ಬೇಡಿಕೆಗಳನ್ನು ನಿರ್ಲಕ್ಷಿಸಿದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಬೇಕಾಗುತ್ತದೆ' ಎಂದು ಪವನ್ ಗೋಸ್ವಾಮಿ ಎಂಬವರು ಎಚ್ಚರಿಸಿದ್ದಾರೆ. 'ಬೇಡಿಕೆಗಳನ್ನು ಈಡೇರಿಸದಿದ್ದರೆ ಆಗಸ್ಟ್ 10ರಂದು ವಿಧಾನಸಭೆಗೆ ಘೇರಾವ್ ಹಾಕುತ್ತೇವೆ' ಎಂದು ಹೇಳಿದರು.

