ಕೋಲ್ಕತ್ತ: ಕಲ್ಕತ್ತ ಹೈಕೋರ್ಟ್ ನೀಡಿದ್ದ ಆದೇಶ ಉಲ್ಲಂಘನೆ ಆರೋಪದ ಮೇಲೆ ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ವಿರುದ್ಧ ಶನಿವಾರ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೆಂಟ್ರಲ್ ಕೋಲ್ಕತ್ತದ ಕ್ಯಾಥೆಡ್ರಲ್ ರಸ್ತೆಯ ಬಳಿ ತೃಣಮೂಲ ಛಾತ್ರ ಪರಿಷತ್ (ಟಿಎಂಸಿಪಿ) ಶುಕ್ರವಾರ ಸಭೆ ಹಮ್ಮಿಕೊಂಡಿತ್ತು.
ಕೆಲ ಷರತ್ತುಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಹೇಸ್ಟಿಂಗ್ಸ್ ಪೊಲೀಸ್ ಠಾಣೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಸಭೆಯ ಸಂಘಟಕರ ವಿರುದ್ಧ ಶುಕ್ರವಾರ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
1,500 ಜನರು ಪಾಲ್ಗೊಳ್ಳಲು ಮಂಗಳವಾರ ಅನುಮತಿಸಿದ್ದ ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರು, ಕಾನೂನು ಸುವ್ಯವಸ್ಥೆಗೆ ಅಡ್ಡಿ ಆಗದಂತೆ ನೋಡಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಿದ್ದರು.
'ಟಿಎಂಸಿಪಿ ಬೆಂಬಲಿಗರು ತಡೆಗೋಡೆಗಳನ್ನು ಕಿತ್ತೆಸೆದರು. ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು. ಭದ್ರತೆಗಿದ್ದ ಪೊಲೀಸರ ಜತೆ ವಾಗ್ವಾದ ನಡೆಸಿದ್ದರಿಂದ ಗೊಂದಲದ ಸ್ಥಿತಿ ನಿರ್ಮಾಣವಾಯಿತು' ಎಂದು ಅಧಿಕಾರಿ ತಿಳಿಸಿದ್ದಾರೆ.
'ಮಮತಾ ಬ್ಯಾನರ್ಜಿ ಮತ್ತಿತರರು ಅಪರಾಧಿಕ ಪಿತೂರಿಯಿಂದ ಅಲ್ಲಿಗೆ ಪ್ರವೇಶಿಸಿದ್ದರು. ಇದು ಹೈಕೋರ್ಟ್ ಆದೇಶದ ಉಲ್ಲಂಘನೆ' ಎಂದು ಸಬ್ ಇನ್ಸ್ಪೆಕ್ಟರ್ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ' ಎಂದು ಅಧಿಕಾರಿ ಹೇಳಿದ್ದಾರೆ.

