ಮಂಜೇಶ್ವರ: ಕಾಸರಗೋಡು ಜಿಲ್ಲಾಡಳಿತದ ವತಿಯಿಂದ ನಡೆದ ಸರ್ಕಾರಿ ಅಧಿಕೃತ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರ ಧ್ವಜವನ್ನು ಸಮರ್ಪಕವಾಗಿ ಅಳವಡಿಸದಿರುವ ಘಟನೆ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು ಹಾಗೂ ಕಾಸರಗೋಡು ಸಂಸದರು ಸೇರಿದಂತೆ ಹಲವು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲೇ ರಾಷ್ಟ್ರ ಧ್ವಜದ ನಿರ್ವಹಣೆಯಲ್ಲಿ ಲೋಪವಾಗಿರುವುದು ಖಂಡನೀಯ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ.ಎಂ. ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಧ್ವಜವು ದೇಶದ ಗೌರವ ಮತ್ತು ಸಾರ್ವಭೌಮತ್ವದ ಸಂಕೇತವಾಗಿದ್ದು, ಸರ್ಕಾರಿ ಕಾರ್ಯಕ್ರಮಗಳಲ್ಲಿ ಅದನ್ನು ಅತ್ಯಂತ ಗೌರವ ಮತ್ತು ನಿಯಮಾನುಸಾರವಾಗಿ ಪ್ರದರ್ಶಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಇಂತಹ ಕಾರ್ಯಕ್ರಮದಲ್ಲೇ ಧ್ವಜವನ್ನು ಸರಿಯಾಗಿ ಅಳವಡಿಸದಿರುವುದು ಗಂಭೀರ ನಿರ್ಲಕ್ಷ್ಯ ಎಂದು ಅವರು ಹೇಳಿದ್ದಾರೆ.
ಈ ಘಟನೆ ಗಮನಕ್ಕೆ ಬಂದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ಕೈಗೊಳ್ಳದಿರುವುದು ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಧ್ವಜ ಸಂಹಿತೆ ಪಾಲನೆಯಲ್ಲಿ ಲೋಪವಾಗಿದ್ದರೆ, ಅದರ ಹೊಣೆಗಾರಿಕೆಯನ್ನು ನಿಗದಿಪಡಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಧ್ವಜವನ್ನು ಸರಿಯಾಗಿ ಕಟ್ಟುವ ಅಥವಾ ಅಳವಡಿಸುವ ಜವಾಬ್ದಾರಿ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಯ ವಿರುದ್ಧ ಇಲಾಖಾ ತನಿಖೆ ನಡೆಸಿ, ತಪ್ಪು ಸಾಬೀತಾದರೆ ಅಮಾನತು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆದರ್ಶ ಬಿಎಂ ಒತ್ತಾಯಿಸಿದ್ದಾರೆ. ಇದೇ ವೇಳೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಸಣ್ಣಪುಟ್ಟ ತಪ್ಪುಗಳನ್ನೂ ದೊಡ್ಡ ಸುದ್ದಿಯನ್ನಾಗಿ ಮಾಡುವವರು ಈ ಘಟನೆಯನ್ನು ಗಮನಿಸದಿರುವುದು ಏಕೆ ಎಂಬ ಪ್ರಶ್ನೆಯನ್ನೂ ಅವರು ಎತ್ತಿದ್ದಾರೆ. ರಾಷ್ಟ್ರ ಧ್ವಜದ ಗೌರವದ ವಿಚಾರದಲ್ಲಿ ರಾಜಕೀಯ ಭೇದಭಾವಕ್ಕೆ ಅವಕಾಶ ಇರಬಾರದು. ಕಾಸರಗೋಡು ಜಿಲ್ಲಾಡಳಿತ ಈ ಘಟನೆಯ ಕುರಿತು ಸ್ಪಷ್ಟನೆ ನೀಡುವುದರ ಜೊತೆಗೆ, ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

.jpg)
.jpg)
