ಕೋಲ್ಕತ್ತ: 'ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಹೊಸತಾಗಿ ತನಿಖೆ ನಡೆಸಲು ಸರ್ಕಾರ ನಿರ್ಧರಿಸಿದೆ' ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ತಿಳಿಸಿದ್ದಾರೆ.
ಮೃತ ವೈದ್ಯೆಯ ತಾಯಿ ಹಾಗೂ ಬಿಜೆಪಿಯ ಹಾಲಿ ಶಾಸಕಿ ರತ್ನ ದೇಬನಾಥ್ ಅವರು ಹೊಸತಾಗಿ ತನಿಖೆ ಮಾಡುವಂತೆ ಪತ್ರ ಬರೆದು ಮನವಿ ಮಾಡಿದ್ದರು. ಮುಖ್ಯ ಕಾರ್ಯದರ್ಶಿ ಹಾಗೂ ತಜ್ಞರ ಜೊತೆ ವಿಸ್ತೃತವಾಗಿ ಚರ್ಚೆ ನಡೆಸಿ, ವಿಶೇಷ ಆಯೋಗ ಕಾಯ್ದೆ-1952ರ ಅಡಿಯಲ್ಲಿ ಹೊಸತಾಗಿ ತನಿಖೆ ನಡೆಸಲು ಆದೇಶಿಸಿದ್ದೇನೆ' ಎಂದು ಅವರು ತಿಳಿಸಿದ್ದಾರೆ.
'ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಲು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಸಂತ್ರಸ್ತೆಯ ಅಂತ್ಯಕ್ರಿಯೆಯಲ್ಲಿ ನಡೆದ ಲೋಪದ ಕುರಿತಂತೆ ಪ್ರತ್ಯೇಕವಾಗಿ ತನಿಖೆ ನಡೆಸಲು ಸೂಚಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು' ಎಂದು ಎಚ್ಚರಿಕೆ ನೀಡಿದ್ದಾರೆ.
2024ರ ಆಗಸ್ಟ್ 9ರಂದು ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು. ಈ ಘಟನೆ ಕುರಿತು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.
ಶ್ರದ್ಧಾಂಜಲಿ ಸಲ್ಲಿಕೆ: ವೈದ್ಯೆ ಮೃತಪಟ್ಟು ಎರಡನೇ ವರ್ಷಾಚರಣೆ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಎರಡು ನಿಮಿಷಗಳ ಕಾಲ ಮೌನವಾಗಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಆರ್.ಜಿ.ಕರ್ ಆಸ್ಪತ್ರೆಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮೃತ ವೈದ್ಯೆಯ ತಾಯಿ ರತ್ನ ಅವರು ಸ್ಮಾರಕದ ಮುಂದೆ ಸಸಿ ನೆಟ್ಟು ನೀರೆರೆದರು.


