ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಕಲಾಪ ಸೋಮವಾರ ಪುನರಾರಂಭಗೊಳ್ಳಲಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಮತ್ತೊಂದು ಸುತ್ತಿನ 'ಸಂಘರ್ಷ'ಕ್ಕೆ ವೇದಿಕೆ ಸಿದ್ಧವಾಗಿದೆ.
ವಿರೋಧ ಪಕ್ಷಗಳು ಗೃಹ ಸಚಿವ ಅಮಿತ್ ಶಾ ವಿರುದ್ಧದ ಹೋರಾಟ ಹಾಗೂ ಅಯೋಧ್ಯೆ ರಾಮ ಮಂದಿರದ ದೇಣಿಗೆ ಕಳವು ಆರೋಪ ವಿಷಯದಲ್ಲಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ.
ಮತ್ತೊಂದೆಡೆ, ಮೋದಿ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕನಿಷ್ಠ ಆರು ಮಸೂದೆಗಳನ್ನು ಅಂಗೀಕರಿಸುವ ಗುರಿ ಹೊಂದಿದೆ.
ಈ ವಾರದ ಕಲಾಪದ ಪಟ್ಟಿಯಲ್ಲಿ ನೇರ ಉಲ್ಲೇಖವಿಲ್ಲದಿದ್ದರೂ, ವಿವಾದಾತ್ಮಕ 'ವಿದೇಶಿ ದೇಣಿಗೆ ನಿಯಂತ್ರಣ (ತಿದ್ದುಪಡಿ) ಮಸೂದೆ'ಯು (ಎಫ್ಸಿಆರ್ಎ) ವಾರದ ಮಧ್ಯಭಾಗದಲ್ಲಿ ಲೋಕಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ.
ಆದರೆ, ಈ ವರ್ಷದ ಏಪ್ರಿಲ್ನಲ್ಲಿ ಅಂಗೀಕಾರ ಪಡೆಯಲು ವಿಫಲವಾಗಿದ್ದ ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸುವ ಯಾವುದೇ ಸೂಚನೆ ಸದ್ಯಕ್ಕೆ ಕಂಡುಬರುತ್ತಿಲ್ಲ. ಎಫ್ಸಿಆರ್ಎ ಮಸೂದೆಯ ಅಂಗೀಕಾರವನ್ನು ಬಜೆಟ್ ಅಧಿವೇಶನದಲ್ಲಿ ಮುಂದೂಡಲಾಗಿತ್ತು.
ಸರ್ಕಾರವು ಮುಂಗಾರು ಅಧಿವೇಶನದ ಮೊದಲ ವಾರದ ಕಲಾಪದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ (ಅಕ್ರಮಗಳ ತಡೆ) ತಿದ್ದುಪಡಿ ಮಸೂದೆ ಮತ್ತು ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಅವಮಾನಿಸುವುದು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುವ 'ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ (ತಿದ್ದುಪಡಿ) ಮಸೂದೆ'ಗೆ ಅಂಗೀಕಾರ ಪಡೆದುಕೊಂಡಿದೆ.
ಆಗಸ್ಟ್ 3ರಿಂದ 7ರವರೆಗಿನ ಕಲಾಪದ ಪಟ್ಟಿಯಲ್ಲಿ ಇಲ್ಲದಿದ್ದರೂ, ತೆರಿಗೆ ಮತ್ತು ಇತರ ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ಸಂಸದರಿಗೆ ಈಗಾಗಲೇ ವಿತರಿಸಲಾಗಿದೆ.
ಶಾ ಹೇಳಿಕೆಗೆ ಪಟ್ಟು ಸಾಧ್ಯತೆ: ಜಂತರ್ಮಂತರ್ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ಗಳ ಬಳಕೆ ಸೇರಿದಂತೆ ಪೊಲೀಸರು ಕೈಗೊಂಡ ಕ್ರಮಗಳ ಕುರಿತು ಹೇಳಿಕೆ ನೀಡುವಂತೆ ಒತ್ತಾಯಿಸಿ ಅಮಿತ್ ಶಾ ಅವರ ಮೇಲೆ ನಿರಂತರ ಒತ್ತಡ ಹೇರಲು ವಿಪಕ್ಷಗಳು ಸಜ್ಜಾಗಿವೆ.
ಶಾ ಅವರು ಜಂತರ್ ಮಂತರ್ಗೆ ಸಂಬಂಧಿಸಿದ ಘಟನೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಹೇಳಿಕೆ ನೀಡಿಲ್ಲ. ಗೃಹ ಸಚಿವಾಲಯಕ್ಕೆ ಸಂಬಂಧಿಸಿದ ಮಸೂದೆಗಳಾದ 'ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ (ತಿದ್ದುಪಡಿ) ಮಸೂದೆ' ಮತ್ತು ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆಯ ಮೇಲಿನ ಚರ್ಚೆಯ ಸಂದರ್ಭಗಳಲ್ಲೂ ಅವರು ಸದನದಲ್ಲಿ ಹಾಜರಿರಲಿಲ್ಲ.

