ಕಾಸರಗೋಡು: ಸ್ವಾತಂತ್ರ್ಯದ 79ನೇ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಮೋರ್ಚಾ ಕಾಸರಗೋಡು ಮಂಡಲ ಸಮಿತಿ ನೇತೃತ್ವದಲ್ಲಿ ರಾಷ್ಟ್ರಧ್ವಜ ಸಹಿತ ಬೈಕ್ ರ್ಯಾಲಿ ಆಯೋಜಿಸಲಾಯಿತು.
ಉಳಿಯತ್ತಡ್ಕದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಮುಖ್ಯ ಭಾಷಣ ಮಾಡಿ, ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರವೇ ಭಾರತಕ್ಕೆ ಪೂರ್ಣಾರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯಂತ ಸದೃಢವಾಗಿದ್ದು, ವಿಶ್ವಕ್ಕೆ ಮಾದರಿಯಾಗಿರುವುದಾಗಿ ತಿಳಿಸಿದ ಅವರು, ನಮ್ಮ ದೇಶವು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞವಾಗಿರುವುದಾಗಿ ತಿಳಿಸಿದರು.
ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ಶ್ರೀವಿದ್ಯಾ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಸವಿತಾ ಟೀಚರ್, ಜಿಲ್ಲಾ ಕಾರ್ಯದರ್ಶಿಗಳಾದ ಪುಷ್ಪ ಗೋಪಾಲನ್, ಪ್ರಮೀಳಾ ಮಜಲ್, ಜಿಲ್ಲಾ ಕೋಶಾಧಿಕಾರಿ ವೀಣಾ ಅರುಣ್ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ಆರ್. ನಾಯ್ಕ್, ಮಹಿಳಾ ಮೋರ್ಚಾ ಜಿಲ್ಲಾ ಕೋಶಾಧಿಕಾರಿ ಶ್ರೀಲತಾ ಟೀಚರ್, ಜಿಲ್ಲಾ ಕಾರ್ಯದರ್ಶಿಗಳಾದ ಮಮತಾ ಸಾಗರ್, ಮಂಡಲ ಪ್ರಧಾನ ಕಾರ್ಯದರ್ಶಿ ಚೇತನಾ, ಕಾರ್ಯದರ್ಶಿ ಅಶ್ವಿತಾ, ಮಧೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜ್ಞಾನಿ ಶಾನ್ಭಾಗ್ ಮುಂತಾದವರು ಉಪಸ್ಥಿತರಿದ್ದರು.
ತಾಳಿಪ್ಪಡವು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮಹಿಳಾ ಮೋರ್ಚಾ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಕೆ.ಎಸ್. ರಮಣಿ ಅವರು ಮಂಡಲ ಅಧ್ಯಕ್ಷೆ ಶ್ರೀವಿದ್ಯಾ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸುವ ಮೂಲಕ ರ್ಯಾಲಿಗೆ ಚಾಲನೆ ನೀಡಿದರು. ನಂತರ ಮೊಗ್ರಾಲ್ ಪುತ್ತೂರು, ಕಾಸರಗೋಡು ನಗರಸಭಾ ವ್ಯಾಫ್ತಿ ಹಾಗೂ ಮಧೂರು ಪ್ರದೇಶಗಳ ಮೂಲಕ ಬೈಕ್ ರ್ಯಾಲಿ ಸಂಚರಿಸಿತು.



