ಚೆನ್ನೈ: ಎಡಪಕ್ಷಗಳು ಹಾಗೂ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಳ್ಳುವ ಪ್ರತಿಭಟನೆ ಮತ್ತು ಆಂದೋಲನಗಳಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರು ಭಾಗವಹಿಸದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಮಿಳುನಾಡಿನ ಉನ್ನತ ಶಿಕ್ಷಣ ಇಲಾಖೆಯು ನಿರ್ದೇಶನ ನೀಡಿದೆ.
ಕಾಲೇಜು ಶಿಕ್ಷಣ ಇಲಾಖೆಯು 'ಅತ್ಯಂತ ತುರ್ತು' ಎಂದು ನಮೂದಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ, 'ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತಗಳು ಜಂಟಿಯಾಗಿ ಕಾರ್ಯನಿರ್ವಹಿಸಿ, ವಿದ್ಯಾರ್ಥಿಗಳು ಯಾವುದೇ ರಾಜಕೀಯ ಪಕ್ಷಗಳ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ನೋಡಿಕೊಳ್ಳಬೇಕು' ಎಂದು ತಿಳಿಸಲಾಗಿದೆ.
ಈ ಸಂಬಂಧ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ವಿವರಗಳನ್ನು ಕಾಲೇಜುಗಳ ಪ್ರಾಂಶುಪಾಲರು ತಕ್ಷಣವೇ ಕಾಲೇಜು ಶಿಕ್ಷಣ ಆಯುಕ್ತರಿಗೆ ವರದಿ ರೂಪದಲ್ಲಿ ಸಲ್ಲಿಸುವಂತೆ ಜಂಟಿ ನಿರ್ದೇಶಕರು ನಿರ್ದೇಶನ ನೀಡಿದ್ದಾರೆ.
ನೀಟ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಗಳನ್ನು ಖಂಡಿಸಿ ಇತ್ತೀಚೆಗೆ ವಿದ್ಯಾರ್ಥಿಗಳು ಮತ್ತು ಯುವ ಸಂಘಟನೆಗಳು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿದ್ದವು. ರಾಜಭವನ ಮುತ್ತಿಗೆ ಯತ್ನ, ಕಾಲೇಜುಗಳ ಎದುರು ಧರಣಿ ಹಾಗೂ ವಿವಿಧೆಡೆ ರ್ಯಾಲಿಗಳು ನಡೆದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

