ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜುಲೈ 20ರಂದು ನಡೆದ ಪ್ರತಿಭಟನೆಯಲ್ಲಿ ಯುವಕನೊಬ್ಬ ಪೆಲೆಟ್ ಗಾಯಗೊಂಡಿದ್ದಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತಿದ್ದಾರೆ.
'ಜಂತರ್ ಮಂತರ್ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಾಹಿಲ್ ಅವರ ಮೇಲೆ ಪೊಲೀಸರು ಪೆಲೆಟ್ ಗನ್ನಿಂದ ದಾಳಿ ಮಾಡಿದ್ದರು. ಇದರಿಂದ ಸಾಹಿಲ್ ಕಣ್ಣಿಗೆ ಗಂಭೀರ ಗಾಯವಾಗಿದೆ' ಎಂದು ರಾಹುಲ್ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಶಾಂತಿಯುತ ಪ್ರತಿಭಟನೆಯ ವಿರುದ್ಧದ ಇಂತಹ ಕ್ರೌರ್ಯವು ಕೇವಲ ಕಾನೂನುಬಾಹಿರವಲ್ಲ. ಇದೊಂದು ಗಂಭೀರ ಅಪರಾಧ. ಈ ಕ್ರೌರ್ಯದ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಯಾವುದೇ ವಿವರಣೆ ನೀಡಿಲ್ಲ. ಹಾಗೆಯೇ ಪ್ರಧಾನಿ ಮೋದಿ ಅವರು ಕ್ಷಮೆಯಾಚಿಸಿಲ್ಲ. ಈಗ ಸಾಹಿಲ್ ನ್ಯಾಯಕ್ಕಾಗಿ ಎಫ್ಐಆರ್ ದಾಖಲಿಸಲು ಬಂದರೆ, ಅದಕ್ಕೂ ಅವಕಾಶ ನೀಡುತ್ತಿಲ್ಲ' ಎಂದು ರಾಹುಲ್ ಆರೋಪಿಸಿದ್ದಾರೆ.
'ಈ ರೀತಿಯಾಗಿ ಸಂವಿಧಾನ ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸಲಾಗುತ್ತಿದೆ. ಅಮಿತ್ ಶಾ ಅವರೇ, ನೀವು ನ್ಯಾಯಕ್ಕೆ ಏಕೆ ಅಷ್ಟೊಂದು ಹೆದರುತ್ತಿದ್ದೀರಿ?, ಈ ಭಯವು ನಿಮ್ಮ ಅಪರಾಧವನ್ನು ನೀವೇ ಒಪ್ಪಿಕೊಳ್ಳುತ್ತಿದ್ದೀರಿ ಎಂಬುದನ್ನು ತೋರಿಸುತ್ತದೆ' ಎಂದು ಕುಟುಕಿದ್ದಾರೆ.
ರಾಹುಲ್ ಅವರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗಾಯಗೊಂಡಿದ್ದಾರೆ ಎನ್ನಲಾದ 19 ವರ್ಷದ ವಿದ್ಯಾರ್ಥಿ ಸಾಹಿಲ್ ಲೋಚಾಬ್ ಅವರೊಂದಿಗೆ ಮಂದಿರ್ ಮಾರ್ಗ ಪೊಲೀಸ್ ಠಾಣೆಗೆ ತೆರಳಿ ಎಫ್ಐಆರ್ ದಾಖಲಿಸುವಂತೆ ಮನವಿ ಮಾಡಿದ್ದರು. ಆದರೆ, ಪೊಲೀಸರು ಮನವಿಗೆ ಸ್ಪಂದಿಸಲಿಲ್ಲ. ಬಳಿಕ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿ ಡಿಸಿಪಿ ಸಚಿನ್ ಶರ್ಮಾ ಅವರನ್ನು ಭೇಟಿಯಾಗಿದ್ದಾರೆ.
ಶರ್ಮಾ ಅವರೊಂದಿಗಿನ ಮಾತುಕತೆ ಫಲ ನೀಡದಿದ್ದಾಗ, ರಾಹುಲ್ ಅವರು ಲೋಚಾಬ್ ಜತೆಗೂಡಿ ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತಿದ್ದಾರೆ. ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಇತರ ನಾಯಕರು ಸಾಥ್ ನೀಡಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಸಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಲೋಚಾಬ್ ಅವರ ಕಣ್ಣು ಮತ್ತು ಹೊಟ್ಟೆಗೆ ಪೆಲೆಟ್ ಗಾಯಗಳಾಗಿದ್ದವು. ನಂತರ ಅವರಿಗೆ ಏಮ್ಸ್ನಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

