ರಾಂಚಿ: ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್ಸಿ) ನಡೆಸಿದ್ದ ಎರಡು ನೇಮಕ ಪರೀಕ್ಷೆಗಳನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಜಾರ್ಖಂಡ್ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಸರ್ಕಾರದ ಈ ತೀರ್ಮಾನವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಕೋರ್ಟ್ನ ಈ ನಿರ್ಧಾರ ಕೊಂಚ ಸಮಾಧಾನ ತಂದಿದೆ.
ಎರಡು ಜೆಪಿಎಸ್ಸಿ ಪರೀಕ್ಷೆಗಳು ಹಾಗೂ ಆಹಾರ ಭದ್ರತಾ ಅಧಿಕಾರಿ ಪರೀಕ್ಷೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಗುರುವಾರ ಈ ಆದೇಶ ಹೊರಡಿಸಿದೆ. ಈ ಕುರಿತು 15 ದಿನಗಳ ಒಳಗಾಗಿ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಹೈಕೋರ್ಟ್ನ ಈ ಮಧ್ಯಂತರ ಆದೇಶದಿಂದ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದ ಅಭ್ಯರ್ಥಿಗಳು ತಕ್ಷಣದಿಂದಲೇ ಮತ್ತೆ ಕೆಲಸಕ್ಕೆ ವರದಿ ಮಾಡಿಕೊಳ್ಳಲು ಕೋರ್ಟ್ ಅನುಮತಿ ನೀಡಿದೆ.
ನೇಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ 'ಜೆಪಿಎಸ್ಸಿ-ಜೆಎಸ್ಎಸ್ಸಿ ಸುಧಾರಣಾ ಮೋರ್ಚಾ ನೇತೃತ್ವದಲ್ಲಿ ಅಭ್ಯರ್ಥಿಗಳು 26 ದಿನಗಳ ಕಾಲ ಸತತ ಪ್ರತಿಭಟನೆ ನಡೆಸಿದ್ದರು.
ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆಗಳ ನಂತರ ಪ್ರತಿಭಟನಾಕಾರರು ಬುಧವಾರ ತಮ್ಮ ಹೋರಾಟವನ್ನು ಹಿಂಪಡೆದಿದ್ದರು. ಅಭ್ಯರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅಕ್ರಮಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ಹೇಮಂತ್ ಸೊರೇನ್ ಸರ್ಕಾರಕ್ಕೆ ಎರಡು ತಿಂಗಳ ಗಡುವು ನೀಡಿದ್ದಾರೆ.
ಇದಕ್ಕೂ ಮುನ್ನ, ಜಾರ್ಖಂಡ್ ಲೋಕತಾಂತ್ರಿಕ ಕ್ರಾಂತಿಕಾರಿ ಮೋರ್ಚಾ ನಾಯಕ ದೇವೇಂದ್ರ ಮಹತೋ ಸೋಮವಾರ ತಮ್ಮ 16 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದರು. ಪ್ರೇಮ್ ನಾಯಕ್ ಹಾಗೂ ಉಮ್ಮೆ ಹಬೀಬಾ ಮಂಗಳವಾರ ತಮ್ಮ ಉಪವಾಸ ಹಿಂಪಡೆದಿದ್ದರು.
ಸರ್ಕಾರವು ಎರಡು ತಿಂಗಳೊಳಗೆ ತಮ್ಮ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ 'ಜೆಪಿಎಸ್ಸಿ-ಜೆಎಸ್ಎಸ್ಸಿ ಸುಧಾರಣಾ ಮೋರ್ಚಾ' ಎಚ್ಚರಿಸಿದೆ.

