ನವದೆಹಲಿ: ಕರೂರು ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರಕಾರದ ಆದೇಶವನ್ನು ರದ್ದುಗೊಳಿಸಿದ್ದ ಮದ್ರಾಸ್ ಉಚ್ಚ ನ್ಯಾಯಾಲಯದ ತೀರ್ಪಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.
TVK ಮುಖ್ಯಸ್ಥ ವಿಜಯ್ ಅವರು ಕರೂರು ಜಿಲ್ಲೆಯಲ್ಲಿ ಸೆಪ್ಟೆಂಬರ್ 27ರಂದು ನಡೆಸಿದ ರ್ಯಾ ಲಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಈ ಕಾಲ್ತುಳಿತದಲ್ಲಿ 41 ಜನರು ಮೃತಪಟ್ಟಿದ್ದರು.
ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠ, ಉಚ್ಚ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ರಾಜ್ಯ ಸರಕಾರ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯ ಕುರಿತು ಶುಕ್ರವಾರ ನೋಟಿಸ್ ಜಾರಿ ಮಾಡುವ ಸಂದರ್ಭದಲ್ಲಿ ಈ ಮಧ್ಯಂತರ ಆದೇಶ ಹೊರಡಿಸಿತು.
ನೀತಿ ನಿರ್ಧಾರದ ಭಾಗವಾಗಿ ಅನುಕಂಪದ ಆಧಾರದಲ್ಲಿ ನೇಮಕಾತಿಗಳನ್ನು ಮಾಡಲು ಸರಕಾರಕ್ಕೆ ಅಧಿಕಾರವಿದೆ ಎಂದು ರಾಜ್ಯ ಸರಕಾರದ ಪರವಾಗಿ ಹಾಜರಾದ ವಕೀಲರು ವಾದಿಸಿದರು ಎಂದು ಮೂಲಗಳು ತಿಳಿಸಿವೆ.
'ಕಾಲ್ತುಳಿತ ಸಂಭವಿಸಿದೆ. ದುರದೃಷ್ಟಕರ ಘಟನೆಯೊಂದು ನಡೆದಿದೆ' ಎಂದು ನ್ಯಾಯಾಲಯ ಹೇಳಿರುವುದನ್ನು barandbench ಉಲ್ಲೇಖಿಸಿದೆ. 'ಅವರಿಗೆ ಪರಿಹಾರ ನೀಡಲು ಸರಕಾರ ನಿರ್ಧರಿಸಿದೆ. ಸರಕಾರಿ ಉದ್ಯೋಗ ನೀಡಬಾರದೇ?' ಎಂದು ನ್ಯಾಯಾಲಯ ಪ್ರಶ್ನಿಸಿದೆ.
ಕಾಲ್ತುಳಿತ ಸಂತ್ರಸ್ತರ ಕುಟುಂಬದ ಸದಸ್ಯರ ನೇಮಕಾತಿಯು ಸಮಾನತೆಯ ಹಕ್ಕು ಮತ್ತು ಸಾರ್ವಜನಿಕ ಉದ್ಯೋಗದ ವಿಷಯಗಳಲ್ಲಿ ಸಮಾನ ಅವಕಾಶದ ಹಕ್ಕಿಗೆ ಸಂಬಂಧಿಸಿದ ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಜುಲೈ 27ರಂದು ಮದ್ರಾಸ್ ಉಚ್ಚ ನ್ಯಾಯಾಲಯದ ಮಧುರೈ ಪೀಠ ತೀರ್ಪು ನೀಡಿತ್ತು.
ವಿವಿಧ ಸರಕಾರಿ ಇಲಾಖೆಗಳಲ್ಲಿ ಅನುಕಂಪದ ಆಧಾರದ ಮೇಲಿನ ನೇಮಕಾತಿಗಾಗಿ ಅನೇಕ ಜನರು ಕಾಯುತ್ತಿದ್ದಾರೆ ಎಂದು ಪೀಠ ಗಮನಿಸಿತು.
ಕಾಲ್ತುಳಿತ ಪ್ರಕರಣದಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಅವಕಾಶ ನೀಡಿದರೆ, ಪಟಾಕಿ ಸ್ಫೋಟ ಮತ್ತು ರಸ್ತೆ ಅಪಘಾತಗಳಂತಹ ಇತರ ಪ್ರಕರಣಗಳಲ್ಲೂ ಇಂತಹ ಬೇಡಿಕೆಗಳ ಪ್ರವಾಹವೇ ಹರಿದು ಬರಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು. ಇತರ ಘಟನೆಗಳಲ್ಲಿ ಸಂಭವಿಸುವ ಜೀವಹಾನಿಗೆ ರಾಜ್ಯ ಸರಕಾರದ ನಿರ್ಲಕ್ಷ್ಯವೇ ಕಾರಣವಾಗಿದ್ದರೂ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡಲಾಗುತ್ತದೆಯೇ ಹೊರತು ಸರಕಾರಿ ಉದ್ಯೋಗಗಳನ್ನಲ್ಲ ಎಂದು ನ್ಯಾಯಾಲಯ ಹೇಳಿತ್ತು.

