ಕಾಸರಗೋಡು: ಸಾರ್ವಜನಿಕ ಸಮಾರಂಭಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ವಿರೋಧಿಸಿ ಧಾರ್ಮಿಕ ಹೇಳಿಕೆ ನೀಡಿದ್ದ ಕಾಂತಪುರಂ ಅಬೂಬಕರ್ ಮುಸ್ಲಿಯಾರ್ ವಿರುದ್ಧ ಮುಖ್ಯಮಂತ್ರಿ ಈ ಹಿಂದೆ ವ್ಯಕ್ತಪಡಿಸಿದ್ದ ಹೇಳಿಕೆಯನ್ನು ಹಿಂಪಡೆದುಕೊಂಡಿರುವ ಕ್ರಮ ಪ್ರತಿಭಟಿಸಿ, ಮಹಿಳಾ ಮೋರ್ಚಾ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮುಖ್ಯಮಂತ್ರಿ ವಿ.ಡಿ. ಸತೀಶನ್ ಪ್ರತಿಕೃತಿ ದಹಿಸುವ ಮೂಲಕ ಪ್ರತಿಭಟನೆ ನಡೆಸಿತು.
ಕಾಸರಗೋಡು ಹೊಸ ಬಸ್ ನಿಲ್ದಾಣ ವಠಾರದಲ್ಲಿ ಆಯೋಜಿಸಲಾಘಿದ್ದ ಪ್ರತಿಭಟನೆಯನ್ನು ಬಿಜೆಪಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಪ್ರಮಿಳಾ ಮಜಲ್ ಉದ್ಘಾಟಿಸಿ ಮಾತನಾಡಿ, ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಪ್ರಗತಿ ಸಾಧಿಸುತ್ತಿರುವ ಈ ಕಾಲಘಟ್ಟದಲ್ಲಿ ಅವರ ಸ್ವಾತಂತ್ರ್ಯ ಮತ್ತು ಹಕ್ಕುಗಳನ್ನು ಪ್ರಶ್ನಿಸುವ ಧಾರ್ಮಿಕ ಮುಖಂಡರ ಇಂತಹ ಹೇಳಿಕೆ ಸ್ಪಷ್ಟವಾಗಿ ಮಹಿಳಾ ವಿರೋಧಿಯಾಗಿವೆ. ಇತರ ಧರ್ಮೀಯರು ಹಾಗೂ ಸಾಮಾಜಿಕ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲು ತೋರುವ ಉತ್ಸಾಹವನ್ನು, ಕಾಂತಾಪುರಂ ಅವರಂತಹ ಮುಖಂಡರುಗಳು ವ್ಯಕ್ತಪಡಿಸುವ ವಿಷಯಗಳಿಗೆ ತೋರ್ಪಡಿಸದೆ, ಸರ್ಕಾರ ಇಲ್ಲಿ ಸಂಪೂರ್ಣ ವೈಫಲ್ಯ ಸಾಧಿಸಿದೆ. ವಿ.ಡಿ ಸತೀಶನ್ ಕಾಂತಾಪುರಂ ಹೇಳಿಕೆ ವಿರುದ್ಧ ನೀಡಿರುವ ಹೇಳಿಕೆಯನ್ನು ಕ್ಷಣಾರ್ಧದಲ್ಲಿ ಹಿಂಪಡೆದುಕೊಳ್ಳುವ ಮೂಲಕ ತನ್ನ ತುಷ್ಠೀಕರಣ ನೀತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಟೀಕಿಸಿದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಗೋಪಾಲನ್, ಜಿಲ್ಲಾ ಕೋಶಾಧಿಕಾರಿ ವೀಣಾ ಅರುಣ್ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ಆರ್. ನಾಯಕ್, ಜಿಲ್ಲಾ ಕಾರ್ಯದರ್ಶಿ ಮಮತಾ ಸಾಗರ್, ಕಾಸರಗೋಡು ಮಂಡಲ ಸಮಿತಿ ಅಧ್ಯಕ್ಷೆ ಶ್ರೀವಿದ್ಯಾ, ಚೇತನಾ ಮತ್ತು ಶ್ರುತಿ, ಜನಪ್ರತಿನಿಧಿಗಳು ಹಾಗೂ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.



