ಕಾಸರಗೋಡು: ಆಧುನಿಕ ಚಿಕಿತ್ಸಾ ಸೌಲಭ್ಯಗಳ ಕೊರತೆಯಿಂದ ಕಾಸರಗೋಡು ಜನರಲ್ ಆಸ್ಪತ್ರೆ ಬಡಜನರ ಪಾಲಿಗೆ ಪ್ರಯೋಜನಕ್ಕೆ ಲಭಿಸದ ಸ್ಥಿತಿ ನಿರ್ಮಣವಾಗಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಹೇಳಿದರು.
ಜನರಲ್ ಆಸ್ಪತ್ರೆಯ ಶೋಚನೀಯ ಸ್ಥಿತಿಯನ್ನು ಸರಿಪಡಿಸುವುದು, ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸುವುದು, ಹೊಸ ಸ್ಪೆಷಾಲಿಟಿ ವಿಭಾಗಗಳನ್ನು ಪ್ರಾರಂಭಿಸುವುದು, ಸ್ಪೆಷಾಲಿಟಿ ವೈದ್ಯರು ಹಾಗೂ ಪ್ಯಾರಾಮೆಡಿಕಲ್ ಸಿಬ್ಬಂದಿಯನ್ನು ನೇಮಿಸುವುದು ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಬಿಜೆಪಿ ಕಾಸರಗೋಡು ಮಂಡಲ ಸಮಿತಿಯು ಜನರಲ್ ಆಸ್ಪತ್ರೆಯ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಸಂಜೆಯ ಧರಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆಸ್ಪತ್ರೆಗೆ 'ಮೆಡಿಕಲ್ ಕಾಲೇಜು ಆಸ್ಪತ್ರೆ' ಎಂಬ ಬೋರ್ಡ್ ಅಳವಡಿಸಿದ್ದನ್ನು ಬಿಟ್ಟರೆ ಬೇರೆ ಯಾವುದೇ ಮಹತ್ವದ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಬಡಜನತೆಗೆ ಅಗತ್ಯವಿರುವ ಚಿಕಿತ್ಸಾ ಸೌಲಭ್ಯವೂ ಲಭಿಸುತ್ತಿಲ್ಲ. ಜಿಲ್ಲೆಯ ಶಾಸಕರು ಸೇರಿದಂತೆ ಜನಪ್ರತಿನಿಧಿಗಳಿಗೆ ಕಾಸರಗೋಡಿನ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಧೈರ್ಯವಿದೆಯೇ ಎಂದು ಅಶ್ವಿನಿ ಪ್ರಶ್ನಿಸಿದರು. ಆಸ್ಪತ್ರೆಯ ದುಸ್ಥಿತಿ ಮತ್ತು ನಿರಂತರವಾಗಿ ಕೇಳಿಬರುತ್ತಿರುವ ಚಿಕಿತ್ಸಾ ಲೋಪಗಳ ದೂರುಗಳಿಂದಾಗಿ ಬಡ ಕುಟುಂಬ ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ದಶಕಗಳಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಮುಸ್ಲಿಂ ಲೀಗ್ ಈ ದುಸ್ಥಿತಿಯ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಬಿಜೆಪಿ ಕಾಸರಗೋಡು ಮಂಡಲ ಅಧ್ಯಕ್ಷ ಗುರುಪ್ರಸಾದ್ ಪ್ರಭು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಸದಸ್ಯೆ ಸವಿತಾ ಟೀಚರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್, ಜಿಲ್ಲಾ ಕಾರ್ಯದರ್ಶಿ ಪ್ರಮೀಳಾ ಮಜಲ್, ಜಿಲ್ಲಾ ಖಜಾಂಚಿ ವೀಣಾ ಅರುಣ್ ಶೆಟ್ಟಿ, ಜಿಲ್ಲಾ ಸೆಲ್ ಸಂಯೋಜಕ ಸುಕುಮಾರ್ ಕುದ್ರೆಪ್ಪಾಡಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ದಿವ್ಯಾ ಸಂದೀಪ್, ರವೀಂದ್ರ ರೈ, ಮಂಡಲ ಉಪಾಧ್ಯಕ್ಷ ಅರುಣ್ಕುಮಾರ್ ಶೆಟ್ಟಿ, ಮಂಡಲ ಕಾರ್ಯದರ್ಶಿ ಲೀಲಾವತಿ ಟೀಚರ್, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ನಾಯ್ಕ್, ಮಂಡಲ ಖಜಾಂಚಿ ಹರೀಶ್ ಕೆ.ಆರ್., ಪುರಸಭೆ, ಮಧೂರು, ಮೊಗ್ರಾಲ್ ಪುತ್ತೂರು ಪಂಚಾಯತ್, ಏರಿಯಾ ಸಮಿತಿ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.



