ನವದೆಹಲಿ: ಯಾವುದೇ ಯುದ್ಧ ಅಥವಾ ಸಂಘರ್ಷಕ್ಕೆ ಯುದ್ಧಭೂಮಿಯಲ್ಲಿ ಪರಿಹಾರ ಸಿಗುವುದಿಲ್ಲ. ಪ್ರತಿಯೊಂದು ಸಮಸ್ಯೆಯನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕವೇ ಬಗೆಹರಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕಿರ್ಗಿಸ್ತಾನದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಶೃಂಗಸಭೆಯಲ್ಲಿ ಅವರು ಮಾತನಾಡಿದರು.
ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್, ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಸಮ್ಮುಖದಲ್ಲೇ ಮೋದಿ ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಕರೆ ನೀಡಿದ್ದಾರೆ.
ಭಯೋತ್ಪಾದನೆ ವಿಚಾರದಲ್ಲಿ ದ್ವಿಮುಖ ನೀತಿಗೆ ಅವಕಾಶವಿರಬಾರದು. ಉಗ್ರರ ಜಾಲ, ಆರ್ಥಿಕ ನೆರವು, ತರಬೇತಿ ಮತ್ತು ಅವರ ಸುರಕ್ಷಿತ ತಾಣಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದೂ ಹೇಳಿದ್ದಾರೆ.
ಮೂಲಸೌಕರ್ಯ ಯೋಜನೆಗಳಲ್ಲಿ ಪರಸ್ಪರ ಸಹಕಾರ ಅಗತ್ಯ. ಆದರೆ, ಅವು ಇತರ ದೇಶಗಳ ಭೂ ಪ್ರಾದೇಶಿಕ ಸಾರ್ವಭೌಮತೆಯನ್ನು ಗೌರವಿಸಬೇಕು. ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಮೂಲಕ ಹಾದುಹೋಗುವ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಯೋಜನೆಗೆ ಭಾರತದ ವಿರೋಧವನ್ನು ಪುನರುಚ್ಚರಿಸಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಜಾಗತಿಕ ಇಂಧನ ಪೂರೈಕೆ ಮತ್ತು ಆರ್ಥಿಕತೆಯ ಮೇಲೆ ದುಷ್ಪರಿಣಾಮ ಬೀರಿದೆ ಎಂದಿದ್ದಾರೆ.
2001ರಲ್ಲಿ ಸ್ಥಾಪನೆಯಾದ ಎಸ್ಸಿಒ ಒಕ್ಕೂಟದಲ್ಲಿ ಚೀನಾ, ರಷ್ಯಾ, ಕಜಕಿಸ್ತಾನ್, ಕಿರ್ಗಿಸ್ತಾನ, ತಜಕಿಸ್ತಾನ ಮತ್ತು ಉಜ್ಬೇಕಿಸ್ತಾನ ಆರಂಭಿಕ ಸದಸ್ಯರಾಗಿದ್ದವು. 2017ರಲ್ಲಿ ಭಾರತ ಹಾಗೂ ಪಾಕಿಸ್ತಾನ, 2023ರಲ್ಲಿ ಇರಾನ್ ಮತ್ತು 2024ರಲ್ಲಿ ಬೆಲಾರಸ್ ಸೇರ್ಪಡೆಯಾದವು. ಈ ಬಾರಿಯ ಶೃಂಗಸಭೆಯು 'ಎಸ್ಸಿಒ-ಪ್ಲಸ್' ಮಾದರಿಯಲ್ಲಿ ನಡೆಯುತ್ತಿದೆ. ಟರ್ಕಿ, ಅರ್ಮೇನಿಯಾ ಸೇರಿದಂತೆ ಹಲವು ದೇಶಗಳ ನಾಯಕರು ಭಾಗವಹಿಸಿದ್ದಾರೆ.

