ಮುಂಬೈ: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ಬುಡಕಟ್ಟು ಮಕ್ಕಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅನಾರೋಗ್ಯ, ಅಪೌಷ್ಠಿಕತೆ ಮತ್ತು ಆರೋಗ್ಯ ಸೌಲಭ್ಯದ ಕೊರತೆ ಅವರನ್ನು ಬಲಿ ತೆಗೆದುಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ 'ಎಕ್ಸ್'ನ ತಮ್ಮ ಪೋಸ್ಟ್ನಲ್ಲಿ, ಮಕ್ಕಳ ಸಾವು ರಾಜ್ಯ ಸರಕಾರದ 'ನಿರ್ದಯತೆ'ಯನ್ನು ಪ್ರತಿಬಿಂಬಿಸುತ್ತದೆ. ಈ ಬಿಕ್ಕಟ್ಟಿಗೆ ಸರಕಾರದ ಸ್ಪಂದನೆ ಅತ್ಯಂತ ನಿಧಾನವಾಗಿದೆ ಎಂದು ಆರೋಪಿಸಿದ್ದಾರೆ.
'ಬಾಲಾಘಾಟ್ನಲ್ಲಿ ಅನಾರೋಗ್ಯ, ಅಪೌಷ್ಠಿಕತೆ ಮತ್ತು ಮೂಲಭೂತ ಆರೋಗ್ಯ ಸೌಲಭ್ಯಗಳ ಕೊರತೆಯಿಂದ 30ಕ್ಕೂ ಹೆಚ್ಚು ಬುಡಕಟ್ಟು ಮಕ್ಕಳು ಮೃತಪಟ್ಟಿದ್ದಾರೆ'' ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಮೋಹನ್ ಯಾದವ್ ಅವರನ್ನು ಗುರಿಯಾಗಿರಿಸಿಕೊಂಡ ವಾಗ್ದಾಳಿ ನಡೆಸಿದ ರಾಹುಲ್ಗಾಂಧಿ, ''ದೀಪ ಬೆಳಗಿಸಿ ಸಂಭ್ರಮ ಆಚರಿಸಿದ ಬಳಿಕ, ಸಮಯ ಸಿಕ್ಕರೆ, ರಾಜ್ಯದ ವಾಸ್ತವ ಸ್ಥಿತಿಯನ್ನು ಒಮ್ಮೆ ನೋಡಿ'' ಎಂದಿದ್ದಾರೆ.
ರೋಗ ನಿಯಂತ್ರಣ, ಪೌಷ್ಠಿಕಾಂಶ ಮತ್ತು ಸ್ವಚ್ಛ ಕುಡಿಯುವ ನೀರಿನ ಕೊರತೆಯ ಜೊತೆಗೆ ಕಳಪೆ ಆರೋಗ್ಯ ವ್ಯವಸ್ಥೆಯು ಮಕ್ಕಳ ಪ್ರಾಣವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಲ್ಲದೆ, ನಕಲಿ ಮಾತ್ರೆಗಳು ಮತ್ತು ಅಕ್ರಮ ಮದ್ಯ ರಾಜ್ಯಾದ್ಯಂತದ ಕುಟುಂಬಗಳ ಮೇಲೆ ಪರಿಣಾಮ ಬೀರುತ್ತಿವೆ ಎಂದು ಆರೋಪಿಸಿದ್ದಾರೆ.
ಇಂದು ಮಧ್ಯಪ್ರದೇಶ ಸರಕಾರ ಭಾರತದ ಅತ್ಯಂತ ಭ್ರಷ್ಟ ಮತ್ತು ಅಸಮರ್ಥ ಸರಕಾರವಾಗಿದೆ. ಇದು ಸತ್ಯ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಮಕ್ಕಳ ಸಾವಿನ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವ ರಾಜೇಂದ್ರ ಶುಕ್ಲಾ ಅವರ ರಾಜೀನಾಮೆಗೆ ಕಾಂಗ್ರೆಸ್ ಬುಧವಾರ ಆಗ್ರಹಿಸಿತ್ತು.
ಮಕ್ಕಳ ಸಾವಿಗೆ ಸಂಬಂಧಿಸಿದ ಪಿಐಎಲ್ ಅನ್ನು ಕಳೆದ ವಾರ ವಿಚಾರಣೆ ನಡೆಸಿದ ಮಧ್ಯಪ್ರದೇಶ ಉಚ್ಚ ನ್ಯಾಯಾಲಯ ರಾಜ್ಯ ಸರಕಾರದ ಪ್ರತಿಕ್ರಿಯೆ ಕೋರಿತ್ತು. ಉಸ್ತುವಾರಿ ಮುಖ್ಯ ನ್ಯಾಯಮೂರ್ತಿ ವಿವೇಖ್ ರುಸಿಯಾ ಮತ್ತು ನ್ಯಾಯಮೂರ್ತಿ ಪ್ರದೀಪ್ ಮಿತ್ತಲ್ ಅವರನ್ನೊಳಗೊಂಡ ವಿಭಾಗೀಯ ಪೀಠ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲಾಘಾಟ್ ಜಿಲ್ಲಾಧಿಕಾರಿ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
ಅರ್ಜಿಯಲ್ಲಿ ಸೂಕ್ತ ಚಿಕಿತ್ಸೆಯ ಬಗ್ಗೆ ಆರೋಪಿಸಲಾಗಿದ್ದು, 50 ಹಾಸಿಗೆಗಳ ಸಾಮರ್ಥ್ಯವಿರುವ ಆಸ್ಪತ್ರೆಯಲ್ಲಿ ಸುಮಾರು 400 ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ. ಸಂತ್ರಸ್ತ ಪ್ರದೇಶಗಳಲ್ಲಿನ ಹ್ಯಾಂಡ್ ಪಂಪ್ಗಳು ಹಳದಿ ಬಣ್ಣದ ನೀರನ್ನು ಪೂರೈಸುತ್ತಿವೆ. ಮಕ್ಕಳು ಹಾಗೂ ಮಹಿಳೆಯರಿಗೆ ಹಲವು ತಿಂಗಳುಗಳಿಂದ ಸಮಯಕ್ಕೆ ಸರಿಯಾಗಿ ಪೌಷ್ಠಿಕ ಆಹಾರ ಸಿಗುತ್ತಿಲ್ಲ ಎಂದೂ ಆರೋಪಿಸಲಾಗಿದೆ.

