ನವದೆಹಲಿ: ದೇಶದ ಎಲ್ಲಾ ರಾಜ್ಯಗಳಲ್ಲಿ ವೃದ್ಧಾಶ್ರಮಗಳ ಸ್ಥಾಪನೆ ಮತ್ತು ಹಿರಿಯ ನಾಗರಿಕರಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ಹೊಸ ವಸ್ತುಸ್ಥಿತಿ ವರದಿಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ.
ಹಿರಿಯ ನಾಗರಿಕರ ಕಲ್ಯಾಣ ಮತ್ತು ರಕ್ಷಣೆಗಾಗಿ ಪರಿಣಾಮಕಾರಿ ಕ್ರಮಗಳನ್ನು ಜಾರಿಗೆ ತರುವಂತೆ ಕೋರಿ 2016ರಲ್ಲಿ ಸಲ್ಲಿಸಲಾಗಿದ್ದ ಹಾಗೂ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಯಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ನ್ಯಾಯಪೀಠ ಡಾ. ಅಶ್ವನಿ ಕುಮಾರ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿತು.
ಪ್ರತಿ ಜಿಲ್ಲೆಯಲ್ಲಿ ವೃದ್ಧಾಶ್ರಮಗಳ ಸ್ಥಾಪನೆ, ಸಾಕಷ್ಟು ಪಿಂಚಣಿ ಮತ್ತು ಹಿರಿಯ ನಾಗರಿಕರಿಗೆ ವೈದ್ಯಕೀಯ ಆರೈಕೆಗೆ ಸಂಬಂಧಿಸಿದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಡಾ. ಅಶ್ವನಿ ಕುಮಾರ್ ಅವರು ಈ ಅರ್ಜಿಯಲ್ಲಿ ಕೋರಿದ್ದರು.

