ನವದೆಹಲಿ: ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರ ಭಾರತ ಭೇಟಿಯನ್ನು ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಿದ ಕನಿಷ್ಠ ಐವರು ಟಿಬೆಟ್ ಪ್ರಜೆಗಳನ್ನು ದೆಹಲಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.
ಪ್ರಗತಿ ಮೈದಾನದ ಸಮೀಪ ಟಿಬೆಟ್ ಸಮುದಾಯದ ಕೆಲವರು ಚೀನಾ ನಿಯೋಗದ ಭೇಟಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ನಡುವೆ, ಚೀನಾ ನಿಯೋಗದ ಸ್ವಾಗತಕ್ಕಾಗಿ ಅಳವಡಿಸಲಾಗಿದ್ದ ಬ್ಯಾನರ್ಗಳನ್ನು ಪ್ರತಿಭಟನಾಕಾರರು ಹರಿದು ಹಾಕಲು ಯತ್ನಿಸುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.
ಉತ್ತರ ದೆಹಲಿಯ ಮಜ್ನು ಕಾ ಟಿಲಾ ಪ್ರದೇಶದಲ್ಲಿಯೂ ಟಿಬೆಟ್ ಸಂಘಟನೆಗಳ ಸದಸ್ಯರು ಜಿನ್ಪಿಂಗ್ ಅವರ ಭಾರತ ಭೇಟಿಯನ್ನು ವಿರೋಧಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.
ಪ್ರತಿಭಟನೆಗಳ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

