ಬದಿಯಡ್ಕ: ಬದಿಯಡ್ಕ ಚಿನ್ಮಯ ವಿದ್ಯಾಲಯ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವವು ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಜರಗಿತು. ಶ್ರೀಕೃಷ್ಣ ಹಾಗೂ ರಾಧೆಯರ ಆಕರ್ಷಕ ಮೆರವಣಿಗೆಯನ್ನು ಮುತ್ತುಕೊಡೆ, ವಾದ್ಯಮೇಳ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಶಾಲಾ ಆವರಣಕ್ಕೆ ಬರಮಾಡಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿನ್ಮಯ ಮಿಷನ್ ಮುಖ್ಯಸ್ಥ ಸ್ವಾಮಿ ವಿವಿಕ್ತಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ವಿದ್ಯಾರ್ಥಿಗಳು ಮೊಬೈಲ್ ದಾಸರಾಗದೆ, ವಿದ್ಯಾರ್ಥಿ ಜೀವನದಲ್ಲಿ ಓದಿಗೆ ಹೆಚ್ಚಿನ ಮಹತ್ವ ನೀಡಬೇಕು. ಜ್ಞಾನಾರ್ಜನೆ, ಉತ್ತಮ ಸಂಸ್ಕಾರ ಹಾಗೂ ಶಿಸ್ತಿನ ಜೀವನವೇ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಪ್ರಮುಖ ಅಂಶಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟರು. ಶ್ರೀಕೃಷ್ಣನ ಜೀವನ ಹಾಗೂ ಸಂದೇಶವು ವಿದ್ಯಾರ್ಥಿಗಳಿಗೆ ಸತ್ಯ, ಧರ್ಮ, ಕರ್ತವ್ಯನಿಷ್ಠೆ ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಪ್ರೇರಣೆಯಾಗಬೇಕು ಎಂದು ಸ್ವಾಮೀಜಿ ತಿಳಿಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಮಾನಸ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಾಪಕರು, ಬೋಧಕೇತರ ವೃಂದ, ಹೆತ್ತವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಿದವು. ಕೃಷ್ಣ-ರಾಧೆಯರ ವೇಷ ಪ್ರದರ್ಶನ, ನೃತ್ಯ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದವು. ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆ ಹಾಗೂ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಕ್ಕೆ ವಿಶೇಷ ಆಕರ್ಷಣೆಯಾಯಿತು. ಭಕ್ತಿ, ಸಂಸ್ಕೃತಿ ಮತ್ತು ವಿದ್ಯಾರ್ಥಿಗಳ ಪ್ರತಿಭೆಯ ಸಮ್ಮಿಲನದೊಂದಿಗೆ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವವು ಶಾಲಾ ಸಮುದಾಯದ ಮನದಲ್ಲಿ ಅವಿಸ್ಮರಣೀಯ ಅನುಭವವಾಗಿ ಮೂಡಿತು.

.jpg)
.jpg)
