ನವದೆಹಲಿ: ವಿದ್ಯಾರ್ಥಿ ಪ್ರತಿಭಟನಕಾರರೊಬ್ಬರ ತಂದೆಯ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಪ್ರಕರಣ ಸಂಬಂಧ ಹಿಂದುತ್ವ ಇನ್ಫ್ಲುಯೆನ್ಸರ್ ಸ್ವತಂತ್ರ ಭಾರದ್ವಾಜ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಪ್ರತಿಭಟನೆ ನಡೆಸಿದೆ.
ಸಿಜೆಪಿ ವಕ್ತಾರ ಸೌರವ್ ದಾಸ್ ನೇತೃತ್ವದಲ್ಲಿ ಪ್ರತಿಭಟನಕಾರರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಎದುರು ಜಮಾಯಿಸಿದ್ದಾರೆ. ಭಾರದ್ವಾಜ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿ ಪ್ರತಿಭಟನಕಾರರು ಘೋಷಣೆಗಳನ್ನು ಕೂಗಿದ್ದಾರೆ.
ಜುಲೈ 20ರಂದು ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ನಿಶು ಆಜಾದ್ ಅವರ ತಂದೆ ಸಂಜಯ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವುದಾಗಿ ಭಾರದ್ವಾಜ್ ಹೇಳಿಕೊಂಡಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾರದ್ವಾಜ್ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಸಂಜಯ್ ಕುಮಾರ್ ಅವರ ತಲೆಗೆ ತೀವ್ರ ಗಾಯವಾಗಿದೆ ಎಂಬ ಆರೋಪವನ್ನು ಪೊಲೀಸರು ತಳ್ಳಿಹಾಕಿದ್ದು, ಗಲಾಟೆ ಸಂದರ್ಭದಲ್ಲಿ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಠಾಣೆಯ ಸುತ್ತಲೂ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲಾಗಿದೆ. ಬ್ಯಾರಿಕೇಡ್ ಅಳವಡಿಸಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ.

