ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಪಡಿಸಿದೆ. ಇದರ ಬೆನ್ನಲ್ಲೇ, ಸೆ.5ರಂದು ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ರ್ಯಾಲಿಯನ್ನು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹಿಂಪಡೆದಿದೆ.
'ಕೇಂದ್ರ ಸರ್ಕಾರದ ಸಕಾರಾತ್ಮಕ ಭರವಸೆ ಮತ್ತು ಎಫ್ಐಆರ್ ರದ್ದುಪಡಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5ರಂದು ಕರೆ ನೀಡಿದ್ದ ಪ್ರತಿಭಟನಾ ರ್ಯಾಲಿಯನ್ನು ಹಿಂಪಡೆಯುವುದು ಸೂಕ್ತವೆಂದು ಭಾವಿಸುತ್ತೇವೆ' ಎಂದು ಸಿಜೆಪಿಯ ಮುಖ್ಯ ವಕ್ತಾರ ಸೌರವ್ ದಾಸ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ಜುಲೈ 25ರಂದು ತನಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ, ಸಿಜೆಪಿ ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿತ್ತು.
'ಶಿಕ್ಷಕರ ದಿನದಂದು ರ್ಯಾಲಿ ನಡೆಯಲಿದೆ. ಇಂಡಿಯಾ ಗೇಟ್ನಿಂದ ಆರಂಭವಾಗಿ ದೆಹಲಿ ಪೊಲೀಸ್ ಮುಖ್ಯ ಕಚೇರಿ ಕಡೆಗೆ ಸಾಗಲಿದೆ' ಎಂದು ಸಿಜೆಪಿ ಹೇಳಿಕೆಯಲ್ಲಿ ತಿಳಿಸಿತ್ತು.
'ನೀಟ್' ರದ್ದಾದ ಬಳಿಕ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಪೋಷಕರು ಹಾಗೂ ಜುಲೈನಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರಿಂದ ಹಲ್ಲೆಗೊಳಗಾದವರು ಪ್ರತಿಭಟನೆಯನ್ನು ಮುನ್ನಡೆಸಲಿದ್ದಾರೆ ಎಂದು ಸಿಜೆಪಿ ಹೇಳಿತ್ತು.
ಎಫ್ಐಆರ್ ರದ್ದುಪಡಿಸಿದ 'ಸುಪ್ರೀಂ'
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿ ಸೇರಿದಂತೆ ಇತರೆ ರಾಜ್ಯಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಸಂಭವಿಸಿದ ಹಿಂಸಾಚಾರ ಆರೋಪದ ಮೇಲೆ ಪ್ರತಿಭಟನಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್ಮಾಲ್ಯಾ ಬಾಗ್ಚಿ, ವಿ.ಮೋಹನಾ ಅವರನ್ನು ಒಳಗೊಂಡ ನ್ಯಾಯಪೀಠವು, ಈ ಕುರಿತು ಆದೇಶ ಹೊರಡಿಸಿದೆ.
ಜುಲೈನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗಳನ್ನು ರದ್ದುಗೊಳಿಸುವಂತೆ ದೆಹಲಿ ಪೊಲೀಸರು ಹಾಗೂ ಮಹಾರಾಷ್ಟ್ರ, ಅಸ್ಸಾಂ, ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಪೀಠ ವಿಚಾರಣೆ ನಡೆಸಿದೆ.

