ನವದೆಹಲಿ: ಭಾರತದ ಆತಿಥ್ಯದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ್ದ ವಿಶ್ವ ನಾಯಕರು ಅನಾರೋಗ್ಯಕ್ಕೀಡಗಿದ್ದಾರೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಯನ್ನು ವಿದೇಶಾಂಗ ಸಚಿವಾಲಯ ಅಲ್ಲಗಳೆದಿದೆ. ದುರುದ್ದೇಶದಿಂದ ಇಂತಹ ಪೋಸ್ಟ್ಗಳನ್ನು ಹಂಚಿಕೊಳ್ಳಲಾಗುತ್ತಿದೆ ಎಂದು ಹೇಳಿದೆ.
ರಾಷ್ಟ್ರ ರಾಜಧಾನಿಯಲ್ಲಿ ಸೆಪ್ಟೆಂಬರ್ 12, 13ರಂದು ಸಮಾವೇಶ ನಡೆದಿತ್ತು. ಇದರಲ್ಲಿ ಪಾಲ್ಗೊಂಡಿದ್ದ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರು ಅಸ್ವಸ್ಥರಾಗಿದ್ದಾರೆ ಎಂಬ ವದಂತಿ ಹರಡಿದೆ. ಇದಕ್ಕೆ ವಿದೇಶಾಂಗ ಸಚಿವಾಲಯದ ಫ್ಯಾಕ್ಟ್ಚೆಕ್ ಘಟಕ, ಪ್ರತಿಕ್ರಿಯೆ ನೀಡಿದ್ದು, ಈ ಸುದ್ದಿಗಳು ನಿರಾಧಾರವಾದವು ಎಂದಿದೆ.
ಬೀಜಿಂಗ್ನ 301 ಆಸ್ಪತ್ರೆಯ ಆವರಣದಲ್ಲಿ ಮಿಲಿಟರಿ ಕಾನೂನು ಜಾರಿಯಾಗಿದೆ. ಅಲ್ಲಿ ಷಿ ಜಿನ್ಪಿಂಗ್ ಅವರಿಗಾಗಿ ಪ್ರತ್ಯೇಕ ವೈದ್ಯಕೀಯ ವಿಭಾಗ ಮೀಸಲಿಡಲಾಗಿದೆ ಎಂದು ಚೀನಾ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಎಕ್ಸ್ ವೇದಿಕೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ, ವದಂತಿ ಹರಡಿತ್ತು.
ಅಧ್ಯಕ್ಷ ರಾಮಫೋಸಾ ದಕ್ಷಿಣ ಆಫ್ರಿಕಾಕ್ಕೆ ಮರಳುತ್ತಿದ್ದಂತೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ಅವರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ. ಆದರೆ, ರಾಮಫೋಸಾ ಅನಾರೋಗ್ಯಕ್ಕೂ ಭಾರತದ ಭೇಟಿಗೂ ನೇರವಾಗಿ ಸಂಬಂಧ ಕಲ್ಪಿಸಿಲ್ಲ.
ಈ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ಜನರು ಇಂತಹ ದುರುದ್ದೇಶದ ಪೋಸ್ಟ್ಗಳ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಸಲಹೆ ನೀಡಿದೆ.
ಭೋಜನಕೂಟಕ್ಕೆ ಗೈರಾಗಿದ್ದ ಷಿ
ಅಂದಹಾಗೆ, ಬ್ರಿಕ್ಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅತಿಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 12ರಂದು ವಿಶೇಷ ಭೋಜನಕೂಟ ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಷಿ ಜಿನ್ಪಿಂಗ್ ಗೈರಾಗಿದ್ದರು ಎಂಬುದು ಉಲ್ಲೇಖಾರ್ಹ.
ಭಾರತ ಮಂಟಪದಲ್ಲಿ ನಡೆದ ಭೋಜನಕೂಟದಲ್ಲಿ ವಿದೇಶಗಳ ಗಣ್ಯರು, ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಉಪಸ್ಥಿತರಿದ್ದರು.
ಷಿ ಅವರಷ್ಟೇ ಅಲ್ಲ, ಅಬುಧಾಬಿಯ ಯುವರಾಜ ಶೇಖ್ ಖಾಲಿದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೂ ಬಂದಿರಲಿಲ್ಲ.

